ಬೆಂಗಳೂರು: `ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಜಾರಿಯಲ್ಲಿರುವ `ಮುಖ್ಯಮಂತ್ರಿಗಳ ನಗರೋತ್ಥಾನ ನಿಧಿ~ ಬಳಕೆಗೆ ಇನ್ನು ಮುಂದೆ ಶಾಸಕರೇ ಅಧ್ಯಕ್ಷರು. ಸ್ಥಳೀಯ ಸಂಸ್ಥೆಗಳಲ್ಲಿ ಸಿದ್ಧಪಡಿಸುವ ಕ್ರಿಯಾ ಯೋಜನೆಗಳಿಗೆ ಶಾಸಕರ ನೇತೃತ್ವದ ಸಮಿತಿಯೇ ಅನುಮೋದನೆ ನೀಡಲಿದೆ~ ಎಂದು ಪೌರಾಡಳಿತ ಸಚಿವ ಬಾಲಚಂದ್ರ ಜಾರಕಿಹೊಳಿ ಗುರುವಾರ ಇಲ್ಲಿ ವಿವರಿಸಿದರು.
ಈ ಯೋಜನೆಯಡಿ ಸುಮಾರು 1,500 ಕೋಟಿ ರೂಪಾಯಿ ತೆಗೆದಿರಿಸಲಾಗಿದೆ. ಇದರ ಉಪಯೋಗ ಸರಿಯಾಗಿ ಆಗುತ್ತಿಲ್ಲ. ಈ ಕಾರಣಕ್ಕೆ ಶಾಸಕರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದು, ಅದರಲ್ಲಿ ಉಪ ವಿಭಾಗಾಧಿಕಾರಿ ಹಾಗೂ ಆಯಾ ವಿಭಾಗಕ್ಕೆ ಸೇರಿದ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಸದಸ್ಯರಾಗಿ ಕೆಲಸ ಮಾಡಲಿದ್ದಾರೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸ್ಥಳೀಯ ಸಂಸ್ಥೆಗಳು ಕ್ರಿಯಾ ಯೋಜನೆ ಸಿದ್ಧಪಡಿಸಿ ಈ ಸಮಿತಿಗೆ ಕಳುಹಿಸಬೇಕು. ಬಳಿಕ ಅದು ಸಭೆ ಸೇರಿ ಮೂಲ ಸೌಕರ್ಯ ಯೋಜನೆಗಳಿಗೆ ಒಪ್ಪಿಗೆ ನೀಡಲಿದೆ ಎಂದು ಅವರು ವಿವರಿಸಿದರು.
ಈ ಯೋಜನೆಯಡಿ ಮಂಜೂರಾದ ಹಣವನ್ನು ಸ್ಥಳೀಯ ಸಂಸ್ಥೆಗಳ ಸದಸ್ಯರೇ ಪರಸ್ಪರ ಹಂಚಿಕೊಂಡು, ನಿರುಪಯುಕ್ತ ಕಾಮಗಾರಿಗಳಿಗೆ ಹೆಚ್ಚಾಗಿ ಬಳಸುತ್ತಿದ್ದರು. ಇದನ್ನು ತಪ್ಪಿಸುವ ಸಲುವಾಗಿ ಶಾಸಕರ ಅಧ್ಯಕ್ಷತೆಯ ಸಮಿತಿ ರಚಿಸಲಾಗಿದೆ ಎಂದು ಸಚಿವರು ಸಮರ್ಥಿಸಿಕೊಂಡರು.
ಸಮೀಕ್ಷೆ: ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸರ್ಕಾರಿ ಆಸ್ತಿಗಳ ಸಮೀಕ್ಷೆಗೆ ಸೂಚಿಸಲಾಗಿದೆ. ಸಮೀಕ್ಷೆಯ ವರದಿಯನ್ನಾಧರಿಸಿ, ಒತ್ತುವರಿ ತೆರವಿಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.