ಬೆಂಗಳೂರು: ಮಾಧ್ಯಮ ಪ್ರತಿನಿಧಿಗಳು ಮತ್ತು ಪೊಲೀಸರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ನಾಲ್ವರು ವಕೀಲರಿಗೆ ನಗರದ ಆರನೇ ಎಸಿಎಂಎಂ ನ್ಯಾಯಾಲಯ ಸೋಮವಾರ ಮಧ್ಯಂತರ ಜಾಮೀನು ನೀಡಿದೆ.
ಆರೋಪಿಗಳಾದ ಬೆಂಗಳೂರು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಪಿ.ರಂಗನಾಥ್, ವಕೀಲರಾದ ಅರುಣ್ನಾಯಕ್, ಸಂತೋಷ್ ಮತ್ತು ರಾಘವೇಂದ್ರ ಅವರಿಗೆ ಜಾಮೀನು ಸಿಕ್ಕಿದೆ. ಆ ನಾಲ್ವರೂ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಸೋಮವಾರ ಸಂಜೆ ಬಿಡುಗಡೆಯಾದರು.
ದೂರಿನಲ್ಲಿ ವಕೀಲರ ಗುಂಪು ಎಂದು ಹೇಳಲಾಗಿದೆ. ಅಲ್ಲದೇ ಬಂಧಿತರ ವಿರುದ್ಧ ವೈಯಕ್ತಿಕ ಆರೋಪಗಳೇನು ಇಲ್ಲ. ಆದ್ದರಿಂದ ಬಂಧಿತರಿಗೆ ಜಾಮೀನು ನೀಡಬೇಕು ಎಂದು ಆರೋಪಿಗಳ ಪರ ವಕೀಲರು ವಾದ ಮಂಡಿಸಿದರು.
ವಾದ ಆಲಿಸಿದ ನ್ಯಾಯಾಧೀಶ ಕೆ.ಎಂ.ಚೂರಿಖಾನ್ ಅವರು, ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದರು. ಪ್ರಕರಣದ ಸಾಕ್ಷ್ಯಗಳನ್ನು ನಾಶ ಮಾಡಬಾರದು, ತನಿಖೆಗೆ ಸಹಕರಿಸಬೇಕು ಮತ್ತು ವಿಚಾರಣೆಗೆ ತಪ್ಪದೆ ಹಾಜರಾಗಬೇಕು ಎಂಬ ಷರತ್ತಿನೊಂದಿಗೆ ಜಾಮೀನು ನೀಡಿದ ನ್ಯಾಯಾಧೀಶರು ವಿಚಾರಣೆಯನ್ನು ಮಾ.16ಕ್ಕೆ ಮುಂದೂಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.