ADVERTISEMENT

ನಿರ್ದೇಶಕ ಎಸ್.ಮಹೇಂದರ್ ಕಾಂಗ್ರೆಸ್‌ಗೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2012, 18:30 IST
Last Updated 2 ಆಗಸ್ಟ್ 2012, 18:30 IST

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಚಲನಚಿತ್ರ ನಿರ್ದೇಶಕ ಎಸ್.ಮಹೇಂದರ್ ಗುರುವಾರ ಕಾಂಗ್ರೆಸ್ ಪಕ್ಷ ಸೇರಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಮಹೇಂದರ್ ಅವರನ್ನು ಕಾಂಗ್ರೆಸ್‌ಗೆ ಬರಮಾಡಿಕೊಂಡರು. ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರೂ ಆಗಿರುವ ಶಾಸಕ ಎಚ್.ಎಸ್.ಮಹದೇವಪ್ರಸಾದ್, ಹನೂರು ಶಾಸಕ ನರೇಂದ್ರ ಉಪಸ್ಥಿತರಿದ್ದರು.

ಬಳಿಕ ಪತ್ರಕರ್ತರ ಜೊತೆ ಮಾತನಾಡಿದ ಪರಮೇಶ್ವರ್, `ಕೋಮುವಾದಿ ರಾಜಕೀಯ ಪಕ್ಷವಾದ ಬಿಜೆಪಿ ಶೋಷಿತ ಸಮುದಾಯದ ಮುಖಂಡರನ್ನು ಬಳಸಿಕೊಂಡು, ಕಡೆಗಣಿಸುತ್ತಿದೆ. ಇದಕ್ಕೆ ಬೇಸತ್ತಿರುವ ಹಲವರು ಈಗ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.

ಮಹೇಂದರ್ ಸೇರ್ಪಡೆ ಆರಂಭವಷ್ಟೆ. ಭ್ರಷ್ಟಾಚಾರದಿಂದ ಬೇಸತ್ತಿರುವ ಬಿಜೆಪಿಯ ಹಲವು ಶಾಸಕರು ಕೂಡ ನಮ್ಮ ಜೊತೆ ಸಂಪರ್ಕದಲ್ಲಿ ಇದ್ದಾರೆ. ಬೇಷರತ್ತಾಗಿ ಪಕ್ಷಕ್ಕೆ ಬರುವವರನ್ನು ನಾವು ಮುಕ್ತವಾಗಿ ಸ್ವಾಗತಿಸುತ್ತೇವೆ~ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.