ಬೆಂಗಳೂರು: ಬೆಂಗಳೂರು ಮೆಟ್ರೊ ರೈಲು ನಿಗಮವು (ಬಿಎಂಆರ್ಸಿಎಲ್) ಕಂಟೋನ್ಮೆಂಟ್ ರೈಲು ನಿಲ್ದಾಣದ ಬಳಿ ಮೂಲ ವಿನ್ಯಾಸದಲ್ಲೇ ಕಾಮಗಾರಿ ನಡೆಸಲು ಮುಂದಾಗಿರುವುದನ್ನು ವಿರೋಧಿಸಿ ಮಾಂಗಲ್ಯ ಅಪಾರ್ಟ್ಮೆಂಟ್ ಸಮುಚ್ಚಯದ ನಿವಾಸಿಗಳು ಸಹಿ ಸಂಗ್ರಹ ಅಭಿಯಾನ ಆರಂಭಿಸಿದ್ದಾರೆ.
‘ನಮ್ಮ ಮೆಟ್ರೊ’ ಎರಡನೇ ಹಂತದಲ್ಲಿ ನಿಗಮ ಇಲ್ಲಿ ಸುರಂಗ ಮಾರ್ಗ ನಿರ್ಮಿಸಲು ಉದ್ದೇಶಿಸಿದೆ. ಕಂಟೋನ್ಮೆಂಟ್ ಹಾಗೂ ಪಾಟರಿ ಟೌನ್ ನಿಲ್ದಾಣದ ನಡುವೆ 1,600 ಮೀಟರ್ ಮಾರ್ಗದ ಕಾಮಗಾರಿಗಾಗಿ ನಿಗಮದ ಅಧಿಕಾರಿಗಳು ಸಮೀಕ್ಷೆ ನಡೆಸಿದ್ದಾರೆ. ಟನಲ್ ವೆಂಟಿಲೇಷನ್ ವ್ಯವಸ್ಥೆ ನಿರ್ಮಾಣಕ್ಕಾಗಿ ಮಾಂಗಲ್ಯ ಅಪಾರ್ಟ್ಮೆಂಟ್ ಸಮುಚ್ಚಯದ ಭಾಗವನ್ನು ಸ್ವಾಧೀನಪಡಿಸಿಕೊಳ್ಳಲು ನಿಗಮ ಉದ್ದೇಶಿಸಿದೆ. ಈ ಯೋಜನೆಯ ವಿವರವನ್ನು ಅಧಿಕಾರಿಗಳು ಇನ್ನೂ ಬಹಿರಂಗಪಡಿಸಿಲ್ಲ. ಈ ಯೋಜನೆಗಾಗಿ ನೂರಾರು ಮನೆಗಳು ನೆಲಸಮಗೊಳ್ಳಲಿವೆ ಎಂದು ಸಹಿ ಅಭಿಯಾನದಲ್ಲಿ ತಿಳಿಸಲಾಗಿದೆ. ಇದಕ್ಕೆ ಈವರೆಗೆ 3,500ಕ್ಕೂ ಅಧಿಕ ಮಂದಿ ಸಹಿ ಹಾಕಿದ್ದಾರೆ.
‘ಮೆಟ್ರೊ ಯೋಜನೆಗೆ ನಮ್ಮ ವಿರೋಧ ಇಲ್ಲ. ಅದಕ್ಕಾಗಿ ಅಪಾರ್ಟ್ಮೆಂಟ್ ಸಮುಚ್ಚಯ ಜಾಗವನ್ನು ವಶಪಡಿಸಿಕೊಳ್ಳುವುದು ಸರಿಯಲ್ಲ. 59 ಕುಟುಂಬಗಳು ನೆಲೆ ಕಳೆದುಕೊಳ್ಳಲಿವೆ. ಜನರಿಗೆ ತೊಂದರೆಯಾಗದ ರೀತಿಯಲ್ಲಿ ಯೋಜನೆ ಕೈಗೆತ್ತಿಕೊಳ್ಳಬೇಕು’ ಎಂದು ಅಪಾರ್ಟ್ಮೆಂಟ್ ಸಮುಚ್ಚಯದ ನಿವಾಸಿಗಳ ಸಂಘಟನೆಯ ಕಾರ್ಯದರ್ಶಿ ವಿನೋದ್ ಎಸ್. ಒತ್ತಾಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.