ADVERTISEMENT

ನೀರು ಸೋರಿಕೆ ನಿಯಂತ್ರಣಕ್ಕೆ ಚಿಂತನೆ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2012, 19:30 IST
Last Updated 22 ಏಪ್ರಿಲ್ 2012, 19:30 IST

ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ನೀರಿನ ಸಮಸ್ಯೆಗೆ ಕಡಿವಾಣ ಹಾಕಲು ಕಾವೇರಿ ನೀರು ಪೂರೈಕೆ ಯೋಜನೆ ಜತೆಗೆ ನೀರು ಸೋರಿಕೆ ನಿಯಂತ್ರಣ ಮತ್ತು  ಕೆರೆಗಳ ನೀರು ಸಂಗ್ರಹ ಯೋಜನೆಗಳನ್ನು ಕೈಗೊಳ್ಳುವ ಬಗ್ಗೆ ಜಲಮಂಡಳಿ ಚಿಂತನೆ ನಡೆಸಿದೆ ಎಂದು ಜಲ ಮಂಡಳಿ ಸಚಿವ  ಎಸ್. ಸುರೇಶ್ ಕುಮಾರ್ ತಿಳಿಸಿದರು.

ತ್ಯಾಜ್ಯ ನೀರಿನ ಪುರ್ನಬಳಕೆ ಸೇರಿದಂತೆ ನೀರಿನ ಕ್ಷಾಮವನ್ನು ನಿಯಂತ್ರಿಸಲು ವಿವಿಧ ಇಲಾಖೆಗಳೊಂದಿಗೆ ಚರ್ಚೆ ನಡೆಸಿ ಯೋಜನೆ ರೂಪಿಸುವುದು ಅಗತ್ಯವಾಗಿದೆ ಎಂದು ನೀರಿನ ಸಮಸ್ಯೆಯ ಮಾರ್ಗೋಪಾಯದ ಕುರಿತು ಶನಿವಾರ ಕರೆದ ಉನ್ನತಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಮಾಜಿ ಸಚಿವ ಪಿ.ಜಿ.ಆರ್ ಸಿಂಧ್ಯ ನೇತೃತ್ವದ ನೀತಿ ನಡವಳಿಕೆ ಅಧ್ಯಯನ ಕೇಂದ್ರವು ನಗರದ ಜಲಕ್ಷಾಮದ ಬಗ್ಗೆ ಸಮೀಕ್ಷೆಗಳನ್ನು ನಡೆಸಿ ವರದಿ ಸಿದ್ಧಪಡಿಸಿದೆ. ಈ ಸಮೀಕ್ಷೆಯ ಅಂಶಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ತಜ್ಞರೊಂದಿಗೆ ಚರ್ಚಿಸಿ ಮುಂಬರುವ ದಿನಗಳಲ್ಲಿ ಒಂದು ಸಮಗ್ರ ಯೋಜನೆಯೊಂದನ್ನು ಸಿದ್ದಪಡಿಸಲಾಗುವುದು ಎಂದರು.

ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಅರವಿಂದ ಶ್ರಿವಾತ್ಸವ,  ರಾಜ್ಯ ನಗರ ನೀರು ಪೂರೃಕೆ ಮತ್ತು ಒಳ ಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಎನ್.ಸಿ ಮುನಿಯಪ್ಪ, ಬೆಂಗಳೂರು ಜಲ ಮಂಡಳಿ ಅಧ್ಯಕ್ಷರಾದ  ಗೌರವ್ ಗುಪ್ತ,  ನಿವೃತ್ತ ಹೆಚ್ಚುವರಿ ಕಾರ್ಯದರ್ಶಿ  ಬಾಲಸುಬ್ರಮಣಿಯನ್,  ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.