ಬೆಂಗಳೂರು: ಗುಲ್ಬರ್ಗದಲ್ಲಿನ ಮೊರಾರ್ಜಿ ದೇಸಾಯಿ ಶಾಲೆ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ಶಾಲೆಗಳಲ್ಲಿ ಶಿಕ್ಷಕ , ಶಿಕ್ಷಕೇತರ ಸಿಬ್ಬಂದಿ ಭರ್ತಿಗೆ ಸಂಬಂಧಿಸಿದಂತೆ 2011ರ ಜನವರಿ 21ರಂದು ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ಹೈಕೋರ್ಟ್ನ ಗುಲ್ಬರ್ಗ ಸಂಚಾರಿ ಪೀಠ ಗುರುವಾರ ತಡೆ ನೀಡಿದೆ.
ಈ ಅಧಿಸೂಚನೆ ಅನ್ವಯ ವಿವಿಧ ದಿನಾಂಕಗಳಲ್ಲಿ 4550 ಹುದ್ದೆಗಳ ಭರ್ತಿಗೆ ಹೊರಡಿಸಿರುವ ಸುತ್ತೋಲೆಗಳನ್ನು ಪ್ರಶ್ನಿಸಿ ರಾಜಕುಮಾರ ಹಾಗೂ ಹಲವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್.ಎ.ಸತ್ಯನಾರಾಯಣ ನಡೆಸಿದರು.
`ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ~ದಲ್ಲಿ ಕೆಲಸ ನಿರ್ವಹಿಸುತ್ತಿರುವ ಅಭ್ಯರ್ಥಿಗಳಿಗೆ ಶೇ 5ರಷ್ಟು ಕೃಪಾಂಕ ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿತ್ತು. ಅರ್ಜಿದಾರರೆಲ್ಲ ಹೊರಗುತ್ತಿಗೆ ಆಧಾರದ ಮೇಲೆ ವಿವಿಧ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರಿಗೆ ಯಾವುದೇ ಕೃಪಾಂಕ ಮೀಸಲು ಇರಿಸಿಲ್ಲ ಎನ್ನುವುದು ಅರ್ಜಿದಾರರ ದೂರು.
ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರ, ಸಮಾಜ ಕಲ್ಯಾಣ ಇಲಾಖೆ, ಇತರ ಪ್ರತಿವಾದಿಗಳಿಗೆ ನ್ಯಾಯಮೂರ್ತಿಗಳು ನೋಟಿಸ್ ಜಾರಿಗೆ ಆದೇಶಿಸಿದ್ದಾರೆ. ಅಧಿಸೂಚನೆಗೆ ಅವರು ಆರು ವಾರಗಳ ತಡೆ ನೀಡಿ ವಿಚಾರಣೆ ಮುಂದೂಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.