ADVERTISEMENT

ನೈಸ್ ವಿರುದ್ಧದ ಎಫ್‌ಐಆರ್‌ಗೆ ತಡೆ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2013, 20:21 IST
Last Updated 24 ಏಪ್ರಿಲ್ 2013, 20:21 IST

ಬೆಂಗಳೂರು: ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್ (ನೈಸ್) ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಶೋಕ ಖೇಣಿ ಅವರ ವಿರುದ್ಧ ಬೆಂಗಳೂರು ಮಹಾನಗರ ಕಾರ್ಯಪಡೆ (ಬಿ.ಎಂ.ಟಿ.ಎಫ್) ಇದೇ 18ರಂದು ದಾಖಲಿಸಿದ್ದ ಪ್ರಥಮ ಮಾಹಿತಿ ವರದಿಗೆ (ಎಫ್.ಐ.ಆರ್) ಹೈಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿದೆ.

ಖೇಣಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ, ತಡೆಯಾಜ್ಞೆ ನೀಡಿ ಆದೇಶಿಸಿದರು. ವಿಚಾರಣೆಯನ್ನು ಮುಂದೂಡಲಾಗಿದೆ.

ಗವಿಪುರ ಗುಟ್ಟಹಳ್ಳಿಯ ಕೆಂಪೇಗೌಡ ಎಂಬುವರು ನೀಡಿದ ದೂರಿನನ್ವಯ ಬಿಎಂಟಿಎಫ್ ಎಫ್‌ಐಆರ್ ದಾಖಲಿಸಿತ್ತು. `ಅಗತ್ಯ ಇಲ್ಲದಿದ್ದರೂ ಹೆಚ್ಚುವರಿಯಾಗಿ 3,000 ಎಕರೆ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಲಾಗಿದ್ದು, ಸಂಬಂಧಿಸಿದ ಪ್ರಾಧಿಕಾರಗಳಿಂದ ಅನುಮತಿ ಪಡೆಯದೆ ನಿವೇಶನ ರಚಿಸಲಾಗಿದೆ. ಅವುಗಳನ್ನು ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಿ, ವಸತಿ ಸಂಕೀರ್ಣಗಳನ್ನು ನಿರ್ಮಿಸಲಾಗುತ್ತಿದೆ' ಎಂದು ಕೆಂಪೇಗೌಡ ಅವರು ನೈಸ್ ವಿರುದ್ಧ ದೂರಿದ್ದರು.

ನಿರೀಕ್ಷಣಾ ಜಾಮೀನು
ಹೆಸರಘಟ್ಟ ಹೋಬಳಿಯ ಮಾದಪ್ಪನಹಳ್ಳಿಯ 32.04 ಎಕರೆ ಸರ್ಕಾರಿ ಜಮೀನು ಕಬಳಿಸಿರುವ ಪ್ರಕರಣದಲ್ಲಿ ಯಲಹಂಕ ಶಾಸಕ, ಬಿಜೆಪಿಯ ಎಸ್. ಆರ್. ವಿಶ್ವನಾಥ್ ಅವರಿಗೆ ಹೈಕೋರ್ಟ್ ಬುಧವಾರ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ವಿಶ್ವನಾಥ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ ಅವರು, ಈ ಆದೇಶ ನೀಡಿದರು. 1 ಲಕ್ಷ ರೂಪಾಯಿ ಮೌಲ್ಯದ ಬಾಂಡ್ ನೀಡಬೇಕು, ಎರಡು ಭದ್ರತೆಗಳನ್ನು ನೀಡಬೇಕು, ಸಾಕ್ಷ್ಯಗಳನ್ನು ನಾಶಪಡಿಸಲು ಯತ್ನಿಸಬಾರದು, ತನಿಖಾಧಿಕಾರಿಗಳ ಜೊತೆ ಸಹಕರಿಸಬೇಕು ಎಂಬ ಷರತ್ತುಗಳನ್ನು ವಿಧಿಸಲಾಗಿದೆ.

ನಿರೀಕ್ಷಣಾ ಜಾಮೀನು ಕೋರಿ ವಿಶ್ವನಾಥ್ ಅವರು ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಅಲ್ಲಿ ಅವರ ಅರ್ಜಿ ತಿರಸ್ಕೃತವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.