ಬೆಂಗಳೂರು: ‘ಹೈಕೋರ್ಟ್ ನೌಕರರ ವೇತನ ಪರಿಷ್ಕರಣೆ ಮತ್ತು ಬಾಕಿ ವೇತನ ಪಾವತಿಗೆ ಅಗತ್ಯವಾದ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ’ ಎಂದು ಅಡ್ವೊಕೇಟ್ ಜನರಲ್ ಎಂ.ಆರ್.ನಾಯಕ್ ಹೈಕೋರ್ಟ್ಗೆ ತಿಳಿಸಿದರು.
‘ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಸುಪ್ರಿಂ ಕೋರ್ಟ್ ನೀಡಿರುವ ನಿರ್ದೇಶನವನ್ನು ನಿಗದಿತ ಅವಧಿಯಲ್ಲಿ ಪಾಲನೆ ಮಾಡಿಲ್ಲ’ ಎಂದು ಆಕ್ಷೇಪಿಸಿ ನಿಜಗುಣಿ ಎಂ. ಕರಡಿಗುಡ್ಡ ಹಾಗೂ ’ಕರ್ನಾಟಕ ಹೈಕೋರ್ಟ್ ನೌಕರರ ಕಲ್ಯಾಣ ಸಂಘ’ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ರಿಜಿಸ್ಟ್ರಾರ್ ಜನರಲ್, ವೇತನ ಪರಿಷ್ಕರಣೆ ಮತ್ತು ಬಾಕಿ ಪಾವತಿ ಕುರಿತ ವರದಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ವಿಚಾರಣೆಯನ್ನು ಮೇ 28ಕ್ಕೆ ಮುಂದೂಡಲಾಗಿದೆ.
ಹೈಕೋರ್ಟ್ ಸಿಬ್ಬಂದಿ ಕಳೆದ 14 ವರ್ಷಗಳಿಂದಲೂ ವೇತನ ಹೆಚ್ಚಳಕ್ಕಾಗಿ ನಡೆಸುತ್ತಿರುವ ಕಾನೂನು ಹೋರಾಟದ ಪ್ರಕರಣ ಇದಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.