ಬೆಂಗಳೂರು: ‘ಸ್ಥಿರಾಸ್ತಿ ವ್ಯಾಜ್ಯವೊಂದರ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ) ನೀಡಿರುವ ನೋಟಿಸ್ ರದ್ದುಪಡಿಸಬೇಕು’ ಎಂದು ಕೋರಿ ಬಿಟಿಎಂ ಲೇಔಟ್ ಪಾಲಿಕೆ ಸದಸ್ಯ ಕೆ.ದೇವದಾಸ್ ಹಾಗೂ ಅವರ ಪತ್ನಿ ವಸಂತ ದೇವದಾಸ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಕುರಿತ ಅರ್ಜಿಯನ್ನು ನ್ಯಾಯಮೂರ್ತಿ ವಿನೀತ್ ಕೊಠಾರಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿ, ‘ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಪಿ ಮುಂದೆ ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗಿ. ಅಲ್ಲಿ ನಿಮಗೇನಾದರೂ ತೊಂದರೆಯಾದರೆ ಪೊಲೀಸ್ ದೂರು ಪ್ರಾಧಿಕಾರವಿದೆ. ಒಂದೊಮ್ಮೆ ಅಲ್ಲಿಯೂ ನ್ಯಾಯ ಸಿಗದಿದ್ದರೆ ಹೈಕೋರ್ಟ್ಗೆ ಬನ್ನಿ’ ಎಂದು ಅರ್ಜಿದಾರರಿಗೆ ಸೂಚಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ಇದೊಂದು ಸಿವಿಲ್ ವ್ಯಾಜ್ಯ. ಎಸಿಪಿ ತಮ್ಮ ಅಧಿಕಾರ ವ್ಯಾಪ್ತಿ ಮೀರಿ ನೋಟಿಸ್ ಜಾರಿಗೊಳಿಸಿದ್ದಾರೆ. ವಿಚಾರಣೆಗೆ ಹಾಜರಾಗುತ್ತಿದ್ದಂತೆಯೇ ಬಂಧಿಸಲಾಗುವುದು ಎಂಬ ಬೆದರಿಕೆಯನ್ನೂ ಹಾಕಿದ್ದಾರೆ’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
‘ಕೆ.ದೇವದಾಸ್ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ಅವರ ತೇಜೋವಧೆ ಮಾಡಲು ಹಾಗೂ ಚುನಾವಣೆಗೆ ಸ್ಪರ್ಧಿಸುವ ಅವಕಾಶ ತಪ್ಪಿಸಲು ದುರುದ್ದೇಶದಿಂದ ಈ ದೂರು ದಾಖಲಿಸಲಾಗಿದೆ. ಆದ್ದರಿಂದ ಎಸಿಪಿ ನೀಡಿರುವ ನೋಟಿಸ್ ರದ್ದುಪಡಿಸಬೇಕು’ ಎಂದು ಕೋರಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.