ADVERTISEMENT

ಪೇಶ್ವೆ ಜಾಮೀನು ಅರ್ಜಿ: ಇಂದು ಆದೇಶ

​ಪ್ರಜಾವಾಣಿ ವಾರ್ತೆ
Published 2 ಜುಲೈ 2012, 19:30 IST
Last Updated 2 ಜುಲೈ 2012, 19:30 IST

ಬೆಂಗಳೂರು: ಅಕ್ರಮ ಆಸ್ತಿ ಹೊಂದಿದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಲಕ್ಷ್ಮಣರಾವ್ ಪೇಶ್ವೆ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಕುರಿತು ಲೋಕಾಯುಕ್ತ ವಿಶೇಷ ನ್ಯಾಯಾಲಯ ಮಂಗಳವಾರ ಆದೇಶ ಪ್ರಕಟಿಸಲಿದೆ.

ಜೂನ್ 22ರಂದು ಪೇಶ್ವೆ ಸೇರಿದಂತೆ ಐವರು ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು, ಆರೋಪಿಗಳು ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವುದನ್ನು ಪತ್ತೆ ಮಾಡಿದ್ದರು. ಹೆಚ್ಚಿನ ಅಕ್ರಮಗಳು ಪತ್ತೆಯಾದ ಹಿನ್ನೆಲೆಯಲ್ಲಿ ಪೇಶ್ವೆ ಅವರನ್ನು ಜೂನ್ 27ರಂದು ಬಂಧಿಸಿದ್ದ ತನಿಖಾ ತಂಡ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಆರೋಪಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗೆ ಲೋಕಾಯುಕ್ತ ಪೊಲೀಸರು ಆಕ್ಷೇಪಣೆ ಸಲ್ಲಿಸಿ, ಜಾಮೀನು ನೀಡದಂತೆ ಮನವಿ ಮಾಡಿದ್ದರು.

ನ್ಯಾಯಾಂಗ ಬಂಧನದ ಅವಧಿ ಮುಗಿದ ಕಾರಣ ಸೋಮವಾರ ಪೇಶ್ವೆ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎನ್. ಕೆ.ಸುಧೀಂದ್ರ ರಾವ್ ಅವರು ಈ ಸಂದರ್ಭದಲ್ಲೇ ಜಾಮೀನು ಅರ್ಜಿಯ ವಿಚಾರಣೆ ನಡೆಸಿದರು.

ಆರೋಪಿ ದೀರ್ಘ ಕಾಲದಿಂದ ವೇತನದ ಮೊತ್ತವನ್ನು ಬ್ಯಾಂಕ್ ಖಾತೆಯಿಂದ ಪಡೆಯದೇ ಇರುವ ಬಗ್ಗೆ ಪೇಶ್ವೆ ಪರ ವಕೀಲರನ್ನು ಪ್ರಶ್ನಿಸಿದರು. ದಾಳಿ ನಡೆದ ದಿನ ಆರೋಪಿಯ ಪತ್ನಿ ಲೋಕಾಯುಕ್ತ ಪೊಲೀಸರ ಕರ್ತವ್ಯನಿರ್ವಹಣೆಗೆ ಅಡ್ಡಿಪಡಿಸಿದ ಕುರಿತೂ ತರಾಟೆಗೆ ತೆಗೆದುಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT