ಬೆಂಗಳೂರು: ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿ ಆನಂದ್ (28) ಎಂಬಾತನಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹50 ಸಾವಿರ ದಂಡ ವಿಧಿಸಿ ನಗರದ 54ನೇ ಸಿಸಿಎಚ್ ನ್ಯಾಯಾಲಯ ಆದೇಶ ಹೊರಡಿಸಿದೆ.
2017ರ ಮಾರ್ಚ್ 10ರಂದು ನಡೆದಿದ್ದ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಧೀಶರಾದ ಎಂ.ಲತಾ ಕುಮಾರಿ, ಈ ಆದೇಶ ಹೊರಡಿಸಿದರು. ಪಬ್ಲಿಕ್ ಪ್ರಾಸಿಕ್ಯೂಟರ್ ಚಿನ್ನ ವೆಂಕಟರಮಣಪ್ಪ ವಾದಿಸಿದ್ದರು.
ಪ್ರಕರಣದ ವಿವರ: ಕನಕಪುರ ತಾಲ್ಲೂಕಿನ ಕರಡಿಗುಡ್ಡದ ನಿವಾಸಿ ಆನಂದ, ಜೆ.ಪಿ.ನಗರ 6ನೇ ಹಂತದ ನಿವಾಸಿ ಬಾಲಕಿಯನ್ನು ಅಪಹರಿಸಿದ್ದ. ಕಬ್ಬಾಳು ಬಳಿಯ ವಸತಿಗೃಹಕ್ಕೆ ಆಕೆಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದ ಎಂದು ಪೊಲೀಸರು ತಿಳಿಸಿದರು.
ವಿಷಯವನ್ನು ಯಾರಿಗೂ ಹೇಳದಂತೆ ಸಂತ್ರಸ್ತೆಗೆ ಅಪರಾಧಿ ಕೊಲೆ ಬೆದರಿಕೆವೊಡ್ಡಿದ್ದ. ಕೆಲ ದಿನಗಳ ಬಳಿಕ ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿತ್ತು. ಅವಾಗಲೇ ಬಾಲಕಿ, ಪೋಷಕರಿಗೆ ವಿಷಯ ತಿಳಿಸಿದ್ದಳು. ನಂತರ ಪೋಷಕರು, ಪುಟ್ಟೇನಹಳ್ಳಿ ಠಾಣೆಗೆ ದೂರು ಕೊಟ್ಟಿದ್ದರು. ತನಿಖೆ ಕೈಗೊಂಡಿದ್ದ ಪೊಲೀಸರು, ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
‘ಈ ಅಪರಾಧಿಗೆ ಇಬ್ಬರು ಪತ್ನಿಯರಿದ್ದಾರೆ. ಮೊದಲ ಪತ್ನಿಗೆ ಇಬ್ಬರು ಮಕ್ಕಳಿದ್ದು, ಎರಡನೇ ಪತ್ನಿಗೆ ಹೆಣ್ಣು ಮಗುವಿದೆ. ಈ ಹಿಂದೆಯೇ ಆನಂದ್ ವಿರುದ್ಧ ಕೊಲೆ ಯತ್ನ ಆರೋಪದಡಿ ಕನಕಪುರ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಡಿ ಬಂಧಿತನಾಗಿದ್ದ ಆತ, ಜೈಲಿಗೂ ಹೋಗಿ ಬಂದಿದ್ದ. ನಂತರವೇ ಬಾಲಕಿಯನ್ನು ಪರಿಚಯ ಮಾಡಿಕೊಂಡು ಕೃತ್ಯ ಎಸಗಿದ್ದ’ ಎಂದು ಪೊಲೀಸರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.