ADVERTISEMENT

ಪ್ರಜಾ ಪ್ರಗತಿರಂಗ ಅಸ್ತಿತ್ವಕ್ಕೆ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2012, 19:30 IST
Last Updated 4 ಏಪ್ರಿಲ್ 2012, 19:30 IST

ಬೆಂಗಳೂರು: ವಿವಿಧ ನಾಗರಿಕ ಮತ್ತು ಸಾಮಾಜಿಕ ಸಂಘಟನೆಗಳು ಒಗ್ಗೂಡಿ `ಪ್ರಜಾ ಪ್ರಗತಿರಂಗ~ ಎಂಬ ಪರ್ಯಾಯ ರಾಜಕೀಯ ವೇದಿಕೆಯನ್ನು ಅಸ್ತಿತ್ವಕ್ಕೆ ತಂದಿವೆ. ರಾಜಕೀಯದಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರ ಮತ್ತು ದುರಾಡಳಿತದ ವಿರುದ್ಧ ಹೋರಾಡುವ ಉದ್ದೇಶವನ್ನು ಈ ವೇದಿಕೆ ಹೊಂದಿದೆ.

ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನವಾದ ಇದೇ 14ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯುವ ಸಮಾರಂಭದಲ್ಲಿ ವೇದಿಕೆಗೆ ಚಾಲನೆ ದೊರೆಯಲಿದೆ. ಹಿಂದುಳಿದ ವರ್ಗಗಳು, ದಲಿತರು, ಮುಸ್ಲಿಮರು, ಕ್ರೈಸ್ತರು, ಮಹಿಳೆಯರು ಮತ್ತು ಆದಿವಾಸಿ ಸಮುದಾಯದ ಸಂಘಟನೆಗಳಿಗೆ ವೇದಿಕೆಯಲ್ಲಿ ಪ್ರಾತಿನಿಧ್ಯ ದೊರೆಯಲಿದೆ.

ಸರ್ವೋದಯ ಕರ್ನಾಟಕ ಪಕ್ಷದ ದೇವನೂರು ಮಹಾದೇವ, ಕರ್ನಾಟಕ ರಾಜ್ಯ ರೈತ ಸಂಘದ ಕೋಡಿಹಳ್ಳಿ ಚಂದ್ರಶೇಖರ್, ಭಾರತೀಯ ಕಲ್ಯಾಣ ಪಕ್ಷದ ಬಿ.ಟಿ.ಲಲಿತಾನಾಯಕ್, ಸೋಷಿಯೋ ಡೆಮಾಕ್ರಟಿಕ್ ಪಕ್ಷದ ಅಬ್ದುಲ್ ಮಜೀದ್, ಅಲೆಮಾರಿ ಬುಡಕಟ್ಟು ಮಹಾಸಭಾದ ಡಾ.ಸಿ.ಎಸ್. ದ್ವಾರಕಾನಾಥ್ ಮತ್ತಿತರರು `ಪ್ರಜಾ ಪ್ರಗತಿರಂಗ~ದ ನೇತೃತ್ವ ವಹಿಸಿದ್ದಾರೆ. ದಲಿತ ಸಂಘರ್ಷ ಸಮಿತಿ ಮತ್ತು ಅಖಿಲ ಭಾರತೀಯ ಕ್ರಿಶ್ಚಿಯನ್ ಕೌನ್ಸಿಲ್ ಕೂಡ ಈ ವೇದಿಕೆಯಲ್ಲಿವೆ.

ಪ್ರಜಾ ಪ್ರಗತಿರಂಗದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೋಡಿಹಳ್ಳಿ ಚಂದ್ರಶೇಖರ್ ಬುಧವಾರ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಭ್ರಷ್ಟಾಚಾರ ಮತ್ತು ದುರಾಡಳಿತ ಸಹಿಸಲು ಆಗದ ಸ್ಥಿತಿ ತಲುಪಿದೆ.

ಭ್ರಷ್ಟಾಚಾರದ ವಿರುದ್ಧ ಹೋರಾಡುವವರಿಗೆ ಈ ಒಕ್ಕೂಟ ವೇದಿಕೆಯಾಗಲಿದೆ. ಒಕ್ಕೂಟವು ಒಗ್ಗಟ್ಟಿನಿಂದ ಮುಂಬರುವ ಚುನಾವಣೆಯನ್ನು ಎದುರಿಸಲಿದೆ ಎಂದರು.

ಒಕ್ಕೂಟದಲ್ಲಿರುವ ಸಂಘಟನೆಗಳು ಚುನಾವಣೆಯನ್ನು ಎದುರಿಸಲು ಅಗತ್ಯವಿರುವ ಸಂಪನ್ಮೂಲವನ್ನು ಹೊಂದಿವೆ. ಸಾಮಾನ್ಯ ಚಿಹ್ನೆಯೊಂದನ್ನು ಬಳಸಿಕೊಳ್ಳಲು ನಿರ್ಧರಿಸಿದ್ದು, ಏ.14ರಂದು ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.