ADVERTISEMENT

ಪ್ರತ್ಯೇಕ ಅಪಘಾತ: ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2013, 20:27 IST
Last Updated 16 ಡಿಸೆಂಬರ್ 2013, 20:27 IST

ಬೆಂಗಳೂರು: ಬಾಣಸವಾಡಿ ಸಮೀಪದ ಹೊರಮಾವು ರೈಲ್ವೆ ಗೇಟ್‌ ಬಳಿ ಭಾನು­ವಾರ ರಾತ್ರಿ ಸಿಮೆಂಟ್‌ ಮಿಕ್ಸರ್‌ ಲಾರಿ ಮತ್ತು ಬೈಕ್‌ ನಡುವೆ ಸಂಭವಿ­ಸಿದ ಅಪಘಾತದಲ್ಲಿ ವಿಜಯ್‌ (20) ಎಂಬು­ವರು ಸಾವನ್ನಪ್ಪಿದ್ದು,ಹೊಸೂರು ರಸ್ತೆಯ ಸಿಂಗಸಂದ್ರದಲ್ಲಿ ಸೋಮವಾರ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಮೂಲತಃ ತಮಿಳುನಾಡಿನ ವಿಜಯ್‌, ಮೂರು ದಿನಗಳ ಹಿಂದಷ್ಟೆ ನಗರದ ಬಂಜಾರಲೇಔಟ್‌ನಲ್ಲಿನ ಅಣ್ಣನ ಮನೆಗೆ ಬಂದಿದ್ದರು. ದಿನಸಿ ಸಾಮಾನುಗಳನ್ನು ತರಲು ರಾತ್ರಿ ಎಂಟು ಗಂಟೆ ಸುಮಾರಿಗೆ ಬೈಕ್‌ನಲ್ಲಿ ಹೊರಮಾವು ಕಡೆಗೆ ಹೋಗುತ್ತಿದ್ದಾಗ ಸಿಮೆಂಟ್‌ ಮಿಕ್ಸರ್‌  ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ತೀವ್ರ ಗಾಯಗೊಂಡ ಅವರನ್ನು ಕೆ.ಆರ್‌.ಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ವೈದ್ಯರ ಸಲಹೆಯಂತೆ ಬೌರಿಂಗ್‌ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದ ವಿಜಯ್, ರಾತ್ರಿ 12.30ಕ್ಕೆ ಸಾವನ್ನಪ್ಪಿದರು ಎಂದು ಪೊಲೀಸರು ಹೇಳಿದ್ದಾರೆ.

ಘಟನೆ ನಂತರ ಸಿಮೆಂಟ್‌ ಮಿಕ್ಸರ್‌ನ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ. ಬಾಣಸವಾಡಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದು ಪ್ರಕರಣ: ಹೊಸೂರು ರಸ್ತೆಯ ಸಿಂಗಸಂದ್ರದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ವಯಸ್ಸು ಸುಮಾರು 35 ರಿಂದ 40 ವರ್ಷ. ಅವರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಬೆಳಿಗ್ಗೆ 6.30ರ ಸುಮಾರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಪ್ರಕರಣ ದಾಖಲಿಸಿಕೊಂಡು ವಾಹನದ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಡಲಾಗಿದ್ದು, ಮಹಿಳೆ­ಯ ಸಂಬಂಧಿಕರು ಎಲೆಕ್ಟ್ರಾನಿಕ್‌ಸಿಟಿ ಸಂಚಾರ ಠಾಣೆಗೆ ಕರೆ ಮಾಡಿ ಶವ ಪಡೆಯಬಹುದು ಎಂದು ಪೊಲೀಸರು ಹೇಳಿದ್ದಾರೆ. ಠಾಣೆಯ ದೂರವಾಣಿ ಸಂಖ್ಯೆ: 080---- 22943718.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.