ADVERTISEMENT

ಪ್ರತ್ಯೇಕ ಪ್ರಕರಣ: ಸರಗಳ್ಳತನ

​ಪ್ರಜಾವಾಣಿ ವಾರ್ತೆ
Published 11 ಜನವರಿ 2012, 19:15 IST
Last Updated 11 ಜನವರಿ 2012, 19:15 IST

ಬೆಂಗಳೂರು: ಯಲಹಂಕ ಉಪನಗರ ಮತ್ತು ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ದುಷ್ಕರ್ಮಿಗಳು ಇಬ್ಬರು ಮಹಿಳೆಯರ ಚಿನ್ನದ ಸರಗಳನ್ನು ದೋಚಿದ್ದಾರೆ. ಅಟ್ಟೂರು ಲೇಔಟ್ ಸಮೀಪದ ಅಕ್ಷಯನಗರದಲ್ಲಿ ದುಷ್ಕರ್ಮಿಗಳು ಬುಧವಾರ ಮಧ್ಯಾಹ್ನ ಜಯಮ್ಮ ಎಂಬುವರ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಅಕ್ಷಯನಗರ ನಿವಾಸಿಯಾದ ಜಯಮ್ಮ ಸಮೀಪದಲ್ಲೇ ಇರುವ ಸಂಬಂಧಿಕರ ಮನೆಗೆ ನಡೆದು ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಇಬ್ಬರು ಕಿಡಿಗೇಡಿಗಳು ಅವರನ್ನು ಬೈಕ್‌ನಲ್ಲಿ ಹಿಂಬಾಲಿಸಿ ಬಂದು 40 ಗ್ರಾಂ ತೂಕದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಯಲಹಂಕ ಉಪನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಮತ್ತೊಂದು ಪ್ರಕರಣ: ದುಷ್ಕರ್ಮಿಯೊಬ್ಬ ಗ್ರಾಹಕನ ಸೋಗಿನಲ್ಲಿ ಬಂದು ಮಹಿಳೆಯ ಚಿನ್ನದ ಸರ ದೋಚಿರುವ ಘಟನೆ ಅಮೃತಹಳ್ಳಿ ಸಮೀಪದ ಕಲ್ಲಪ್ಪಲೇಔಟ್‌ನಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.

ಕಲ್ಲಪ್ಪಲೇಔಟ್ ನಿವಾಸಿ ನರಸಮ್ಮ ಎಂಬುವರು ಈ ಸಂಬಂಧ ದೂರು ಕೊಟ್ಟಿದ್ದಾರೆ. ಅವರು ಮನೆಯ ಸಮೀಪವೇ ದಿನಸಿ ಅಂಗಡಿ ಇಟ್ಟುಕೊಂಡಿದ್ದಾರೆ. ಅವರು ಮಧ್ಯಾಹ್ನ ಅಂಗಡಿಯಲ್ಲಿದ್ದ ಸಂದರ್ಭದಲ್ಲಿ ಗ್ರಾಹಕನ ಸೋಗಿನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಅವರ ಸರ ಕಿತ್ತುಕೊಂಡು ಬೈಕ್‌ನಲ್ಲಿ ಪರಾರಿಯಾಗಿದ್ದಾನೆ ಎಂದು ಅಮೃತಹಳ್ಳಿ ಪೊಲೀಸರು ತಿಳಿಸಿದ್ದಾರೆ.

ದುಷ್ಕರ್ಮಿ 35 ಗ್ರಾಂ ತೂಕದ ಸರ ದೋಚಿದ್ದಾನೆ ಎಂದು ನರಸಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.