ADVERTISEMENT

ಪ್ರಭುತ್ವ ಸಾಧನೆಗೆ ಸುಪ್ತ ಶಕ್ತಿ ಬಳಸಿ

​ಪ್ರಜಾವಾಣಿ ವಾರ್ತೆ
Published 22 ಜನವರಿ 2012, 19:30 IST
Last Updated 22 ಜನವರಿ 2012, 19:30 IST

ಯಲಹಂಕ: ವಿದ್ಯಾರ್ಥಿಗಳು ತಮ್ಮಲ್ಲಿ ಅಡಗಿರುವ ಅಗಾಧವಾದ ಶಕ್ತಿಯನ್ನು ಬಳಸಿಕೊಂಡು ಶೈಕ್ಷಣಿಕ ಹಾಗೂ ಇತರೆ ಕ್ಷೇತ್ರಗಳಲ್ಲಿ ಪ್ರಭುತ್ವವನ್ನು ಸಾಧಿಸಬೇಕು ಎಂದು ಸಂಗೀತ ನಿರ್ದೇಶಕ ಹಂಸಲೇಖ ಹೇಳಿದರು.

ಇಲ್ಲಿಗೆ ಸಮೀಪದ ಅನಂತಪುರದ ನಾಗಾರ್ಜುನ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ `ಅನಾವರಣ~ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಪಾಠದ ಜೊತೆಗೆ ಸಾಂಸ್ಕೃತಿಕ ಕೌಶಲ್ಯ ವೃದ್ಧಿಯನ್ನು ಬೆಳೆಸಿಕೊಳ್ಳಬೇಕು ಎಂದರು.

`ಕಲಾವಿದರು ಮತ್ತು ಸಂಗೀತಗಾರರು ಈ ಸಮಾಜಕ್ಕೆ ಅತ್ಯವಶ್ಯಕವಾಗಿ ಬೇಕೇ ಬೇಕು~ ಎಂದು ಪ್ರತಿಪಾದಿಸಿದ ಅವರು, `ಸಂಗೀತ, ನೃತ್ಯ, ನಾಟಕ ಹಾಗೂ ತಂತ್ರಜ್ಞಾನದಲ್ಲಿ ಪರಿಣತಿ ಪಡೆದವರಿಗೆ ಅನೇಕ ಅವಕಾಶಗಳಿವೆ. ಇದರ ಸದುಪಯೋಗ ಪಡೆದುಕೊಳ್ಳಬೇಕು~ ಎಂದು ತಿಳಿಸಿದರು.

ಬೆಂಗಳೂರು ಉತ್ತರ ವಲಯ ಉಪ ಪೊಲೀಸ್ ಆಯುಕ್ತ ಎಚ್.ಎಸ್. ರೇವಣ್ಣ, ಪೋಷಕರು ಮಕ್ಕಳ ಮೇಲೆ ಯಾವುದೇ ಒತ್ತಡ ಹೇರದೆ ಅವರಿಗೆ ಆಸಕ್ತಿಯಿರುವ ವಿಷಯಗಳ ಅಯ್ಕೆ ಮತ್ತು ಅಧ್ಯಯನಕ್ಕೆ ಸಹಕಾರ ನೀಡಬೇಕು ಎಂದರು.

ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ಹಾಗೂ ಕಳೆದ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ನಾಗಾರ್ಜುನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ವಿ. ಶೇಖರರಾಜು ಇತರರು ಇದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.