ADVERTISEMENT

ಪ್ರಾಥಮಿಕ ಶಾಲೆ ಮಕ್ಕಳಿಗೆ ಷೂ: ಕಿಮ್ಮನೆ

​ಪ್ರಜಾವಾಣಿ ವಾರ್ತೆ
Published 4 ಜುಲೈ 2013, 20:19 IST
Last Updated 4 ಜುಲೈ 2013, 20:19 IST

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಒಂದರಿಂದ 5ನೇ ತರಗತಿವರೆಗಿನ ಮಕ್ಕಳಿಗೆ ಷೂ ನೀಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಹೇಳಿದರು.

ತಮಿಳುನಾಡಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಷೂ ನೀಡಲಾಗುತ್ತಿದೆ. ಅದೇ ಮಾದರಿಯಲ್ಲಿ ನಮ್ಮ ರಾಜ್ಯದ ಮಕ್ಕಳಿಗೂ ಷೂ ನೀಡಬೇಕು ಎಂಬ ವಿಷಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗಮನಕ್ಕೆ ತರಲಾಗಿದೆ ಎಂದು ಗುರುವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಆರ್ಥಿಕ ಪರಿಸ್ಥಿತಿ  ಆಧರಿಸಿ ಸಿದ್ದರಾಮಯ್ಯ ಅವರು ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಈ ಯೋಜನೆಗೆ ಎಷ್ಟು ಹಣ ವೆಚ್ಚವಾಗಲಿದೆ ಎಂಬ ಮಾಹಿತಿ ಸದ್ಯ ಲಭ್ಯವಿಲ್ಲ. ಈ ಬಗ್ಗೆ ಇಲಾಖೆಯ ಅಧಿಕಾರಿಗಳು ಲೆಕ್ಕಾಚಾರ ಮಾಡುತ್ತಿದ್ದಾರೆ ಎಂದರು.

ಶಾಲಾ ಮಕ್ಕಳಿಗೆ ಹಾಲು ನೀಡುವ ಬಗ್ಗೆ ಸಿದ್ದರಾಮಯ್ಯ ಅವರೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಯಾವಾಗಿನಿಂದ ಹಾಲು ಕೊಡಬೇಕು ಎಂಬುದು ಇನ್ನು ನಿರ್ಧಾರವಾಗಿಲ್ಲ. ಈ ಯೋಜನೆ ಜಾರಿಗೆ 600 ಕೋಟಿ ರೂಪಾಯಿ ವೆಚ್ಚವಾಗಲಿದ್ದು, ಸಂಪನ್ಮೂಲಗಳ ಲಭ್ಯತೆ ನೋಡಿ ಕೊಂಡು ಅನುಷ್ಠಾನದ ಸ್ವರೂಪವನ್ನು ನಿರ್ಧರಿಸಲಾಗುವುದು ಎಂದರು.

ಪ್ರತಿನಿತ್ಯ ಹಾಲು ನೀಡುವ ಬಗ್ಗೆ ಪಶುಸಂಗೋಪನಾ ಇಲಾಖೆ ಪ್ರಸ್ತಾವ ಸಲ್ಲಿಸಿದೆ. ಆದರೆ, ಈ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. ಪ್ರತಿನಿತ್ಯ ಹಾಲು ಕೊಡಬೇಕಾ ಅಥವಾ ದಿನ ಬಿಟ್ಟು ದಿನ ಹಾಲು ಕೊಡಬೇಕಾ ಎಂಬ ಬಗ್ಗೆ ಮುಖ್ಯಮಂತ್ರಿಗಳು ತೀರ್ಮಾನಿ ಸಲಿದ್ದಾರೆ ಎಂದು ತಿಳಿಸಿದರು.

`ಕರ್ನಾಟಕ ಪಬ್ಲಿಕ್ ಶಾಲೆ' ಪ್ರಾರಂಭಿಸುವ ಬಗ್ಗೆ ಪ್ರಸ್ತಾಪ ಆಗಿದೆ ಅಷ್ಟೆ. ಇದರ ಸಾಧಕ - ಬಾಧಕಗಳ ಬಗ್ಗೆ ಚರ್ಚೆಯಾಗಬೇಕು. ಕೆಲವೆಡೆ ಮಕ್ಕಳೇ ಇಲ್ಲ. ಆದರೆ, ಶಿಕ್ಷಕರು ಇದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಜನಸಂಖ್ಯೆ ಕಡಿಮೆ ಆಗುತ್ತಿರುವುದು ಹಾಗೂ ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯಗಳ ಕೊರತೆಯಿಂದಾಗಿ ಮಕ್ಕಳ ಸಂಖ್ಯೆ ಕಡಿಮೆ ಆಗುತ್ತಿದೆ ಎಂಬ ಅಭಿಪ್ರಾಯ ಇದೆ ಎಂದರು.

ಪಠ್ಯಪುಸ್ತಕ ಮತ್ತು ಸಮವಸ್ತ್ರ ಪೂರೈಕೆಯಲ್ಲಿ ಆಗಿರುವ ವಿಳಂಬಕ್ಕೆ ಹಿಂದಿನ ಬಿಜೆಪಿ ಸರ್ಕಾರವೇ ಹೊಣೆ. ಈ ತಿಂಗಳ ಅಂತ್ಯದ ಒಳಗೆ ಎಲ್ಲ ಮಕ್ಕಳಿಗೆ ಸಮವಸ್ತ್ರ, ಪಠ್ಯಪುಸ್ತಕ ಪೂರೈಸಲಾಗುವುದು. ಮುಂದಿನ ವರ್ಷ ಈ ರೀತಿ ಆಗದಂತೆ ನೋಡಿಕೊಳ್ಳಲಾ ಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.