ADVERTISEMENT

ಪ್ರೌಢಶಾಲೆ ಮುಖ್ಯೋಪಾಧ್ಯಾಯ ಹುದ್ದೆ....

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2011, 19:30 IST
Last Updated 16 ಅಕ್ಟೋಬರ್ 2011, 19:30 IST

ಬೆಂಗಳೂರು: ಸರ್ಕಾರಿ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರಾಗಿ ನೇರ ನೇಮಕಾತಿ ಮೂಲಕ ಆಯ್ಕೆಯಾಗಿರುವ 629 ಅಭ್ಯರ್ಥಿಗಳಿಗೆ ಡಿಸೆಂಬರ್ ಅಂತ್ಯದ ಒಳಗೆ ನೇಮಕಾತಿ ಆದೇಶ ನೀಡುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಭರವಸೆ ನೀಡಿದ್ದಾರೆ ಎಂದು ನೇರ ನೇಮಕಾತಿ ಹೊಂದಿದ ಪ್ರೌಢಶಾಲಾ ಮುಖ್ಯ ಶಿಕ್ಷಕರ ಹೋರಾಟ ಸಮಿತಿ ಅಧ್ಯಕ್ಷ ಜಿ.ವೆಂಕಟೇಶ್ ತಿಳಿಸಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ತುಷಾರ್ ಗಿರಿನಾಥ್ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಮಾತುಕತೆ ಫಲಪ್ರದವಾಗಿದ್ದು, ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಇದೇ 10ರಿಂದ ನಡೆಸುತ್ತಿದ್ದ ಸತ್ಯಾಗ್ರಹವನ್ನು ಕೈಬಿಡಲಾಗಿದೆ ಎಂದು ಅವರು ಹೇಳಿದ್ದಾರೆ.
 
ರಾಜ್ಯ ಮಾಧ್ಯಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಕೃಷ್ಣ ಭಟ್, ಶಾಸಕ ಅರುಣ್ ಶಹಾಪುರ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಕೆ.ಮಂಜುನಾಥ್, ಹೋರಾಟ ಸಮಿತಿಯ ಪದಾಧಿಕಾರಿಗಳು ಪಾಲ್ಗೊಂಡಿದ್ದ ಸಭೆಯಲ್ಲಿ ನೇರ ನೇಮಕಾತಿ ಮೂಲಕ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಮತ್ತು ಬಡ್ತಿ ಪಡೆಯಲು ಕಾಯುತ್ತಿರುವ ಸಹ ಶಿಕ್ಷಕರಿಗೆ ತೊಂದರೆಯಾಗದ ರೀತಿಯಲ್ಲಿ ಸಮಸ್ಯೆ ಬಗೆಹರಿಸಲು ತೀರ್ಮಾನಿಸಲಾಯಿತು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.