ಬೆಂಗಳೂರು: ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಬೆಂಗಳೂರು ಬಂದ್ಗೆ ಬೆಂಬಲ ನೀಡದಿರಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ತೀರ್ಮಾನಿಸಿದೆ.
‘ಬಂದ್ ಕುರಿತಂತೆ ನಿರ್ಮಾಪಕರು, ಪ್ರದರ್ಶಕರು ಮತ್ತು ವಿತರಕರೊಂದಿಗೆ ಸಭೆ ನಡೆಸಲಾಗಿದೆ. ಶಾಲೆಯಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಕುರಿತು ಸರ್ಕಾರ ಕೆಲವು ಸೂಕ್ತ ಕ್ರಮಗಳನ್ನು ಕೈಗೊಂಡಿರುವುದರಿಂದ ಬಂದ್ ಬೆಂಬಲಿಸುವ ಅವಶ್ಯಕತೆ ಇಲ್ಲ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು. ಹೀಗಾಗಿ ನೇರವಾಗಿ ಬಂದ್ನಲ್ಲಿ ಪಾಲ್ಗೊಳ್ಳದಿರಲು ತೀರ್ಮಾನಿಸಲಾಯಿತು’ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಚ್.ಡಿ. ಗಂಗರಾಜು ‘ಪ್ರಜಾವಾಣಿ’ಗೆ ತಿಳಿಸಿದರು.
‘ನಿರ್ಮಾಪಕರು, ಪ್ರದರ್ಶಕರು ಸ್ವಯಂಪ್ರೇರಣೆಯಿಂದ ಬಂದ್ನಲ್ಲಿ ಭಾಗವಹಿಸಬಹುದಾಗಿದೆ. ಈ ಬಗ್ಗೆ ಯಾರ ಮೇಲೂ ಒತ್ತಡ ಹೇರುವುದಿಲ್ಲ. ಬಹುತೇಕ ಸಿನಿಮಾಗಳ ಚಿತ್ರೀಕರಣ ನಗರದಾಚೆ ಗಿನ ಸ್ಥಳಗಳಲ್ಲಿ ನಡೆಯುತ್ತಿದೆ. ಹೀಗಾಗಿ ಚಿತ್ರೀಕರಣಗಳನ್ನು ಸ್ಥಗಿತಗೊಳಿಸುವಂತೆಯೂ ಸೂಚಿಸಿಲ್ಲ’ ಎಂದರು.ಜಾಗೃತಿ ಕಿರುಚಿತ್ರ: ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಅದರ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸಲು ಕಿರುಚಿತ್ರ ತಯಾರಿಸಲು ವಾಣಿಜ್ಯ ಮಂಡಳಿ ಮುಂದಾಗಿದೆ.
‘ಭಗವಾನ್, ನಾಗಣ್ಣ ಮುಂತಾದ ನಿರ್ದೇಶಕರ ನೇತೃತ್ವದಲ್ಲಿ ಈ ಕಿರುಚಿತ್ರ ತಯಾರಾಗಲಿದೆ. ಇದರಲ್ಲಿ ಖ್ಯಾತ ಕಲಾವಿದರು ಕಾಣಿಸಿಕೊಳ್ಳಲಿದ್ದಾರೆ. ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿಯೂ ಚಿತ್ರ ಪ್ರದರ್ಶಿಸುವ ಮೂಲಕ ಜಾಗೃತಿ ಮೂಡಿಸಲು ಚಿತ್ರರಂಗ ಪ್ರಯತ್ನಿಸಲಿದೆ’ ಎಂದು ಗಂಗರಾಜು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.