ADVERTISEMENT

ಬಗರ್‌ಹುಕುಂ ಅಕ್ರಮ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2017, 20:20 IST
Last Updated 24 ಅಕ್ಟೋಬರ್ 2017, 20:20 IST

ಬೆಂಗಳೂರು: ‘ಬೆಂಗಳೂರು ದಕ್ಷಿಣ ತಾಲ್ಲೂಕಿನಲ್ಲಿ ನಡೆದಿರುವ ಬಗರ್‌ಹುಕುಂ ಅಕ್ರಮದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಮಂಜೂರು ಮಾಡಿರುವ ಜಾಗವನ್ನು ಸ್ವಾಧೀನಪಡಿಸಿಕೊಳ್ಳಬೇಕು’ ಎಂದು ಆಗ್ರಹಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿ.ಶಂಕರ್‌ ಅವರಿಗೆ ಕಾಂಗ್ರೆಸ್‌ನ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಮಾಹಿತಿ ತಂತ್ರಜ್ಞಾನ ವಿಭಾಗದ ಪದಾಧಿಕಾರಿಗಳು ಮಂಗಳವಾರ ಮನವಿ ಸಲ್ಲಿಸಿದರು.

‘ಬಗರ್‌ಹುಕುಂ ಸಮಿತಿಯು 1994ರಿಂದ ಉಳ್ಳವರಿಗೆ ಅಕ್ರಮವಾಗಿ ನೂರಾರು ಎಕರೆ ಮಂಜೂರು ಮಾಡಿದೆ. ಈ ಹಿಂದೆ ಪಹಣಿಗಳಲ್ಲಿ ಮಂಜೂರಾತಿದಾರರ ಹೆಸರು ಇತ್ತು. ಬಳಿಕ ಭೂಮಿಯನ್ನು ಮಾರಾಟ ಮಾಡಿದ್ದರಿಂದ ಅವರ ಹೆಸರು ನಾಪತ್ತೆಯಾಗಿದೆ. ಬಿಜೆಪಿ ಕಾರ್ಯಕರ್ತರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜಾಗ ಮಂಜೂರು ಮಾಡಲಾಗಿದೆ’ ಎಂದು ಪದಾಧಿಕಾರಿಗಳು ಆರೋಪಿಸಿದರು.

‘ಈ ಅಕ್ರಮದ ಬಗ್ಗೆ ರಾಜ್ಯಪಾಲ, ಲೋಕಾಯುಕ್ತ, ಜಿಲ್ಲಾಧಿಕಾರಿ, ಬಿಎಂಟಿಎಫ್‌ ಮುಖ್ಯಸ್ಥರಿಗೆ 10 ವರ್ಷಗಳ ಹಿಂದೆಯೇ ದೂರು ಸಲ್ಲಿಸಲಾಗಿತ್ತು. ಅವರು ಅಕ್ರಮ ಬಯಲಿಗೆಳೆಯಲು ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. ಈ ಸಂಬಂಧ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಜಾಗ ಮಂಜೂರಾತಿ ಮಾಡಿಸಿಕೊಂಡಿರುವ ವ್ಯಕ್ತಿಗಳ ಸಂಪೂರ್ಣ ವಿವರ ಬಹಿರಂಗಪಡಿಸಬೇಕು. ಜತೆಗೆ ಈ ಜಾಗವನ್ನು ವಸತಿರಹಿತರಿಗೆ ನೀಡಬೇಕು’ ಎಂದು ಅವರು ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.