ADVERTISEMENT

ಬರದ ಹಿನ್ನೆಲೆ: ನಿರ್ಧಾರ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2012, 19:30 IST
Last Updated 19 ಏಪ್ರಿಲ್ 2012, 19:30 IST

ಬೆಂಗಳೂರು: ರಾಜ್ಯದಲ್ಲಿ ಬರದ ಬವಣೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ವೇತನ ತಾರತಮ್ಯ ನಿವಾರಣೆ ಬೇಡಿಕೆ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳುವುದನ್ನು ಸರ್ಕಾರ ಸದ್ಯಕ್ಕೆ ಮುಂದೂಡಿದೆ.

ಸರ್ಕಾರದ ಈ ನಿರ್ಧಾರಕ್ಕೆ ಉಪನ್ಯಾಸಕರ ಸಂಘ ಕೂಡ ಸಮ್ಮತಿಸಿದೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಅಡ್ಡಿಪಡಿಸುವುದಿಲ್ಲ ಎಂದು ಹೇಳಿದೆ.

`ಬರ ಪರಿಸ್ಥಿತಿ ಸುಧಾರಿಸಿದ ನಂತರ ಉಪನ್ಯಾಸಕರ ಸಂಘದ ಪದಾಧಿಕಾರಿಗಳನ್ನು ಕರೆದು ಚರ್ಚಿಸಲು ಸಿಎಂ ಡಿ.ವಿ.ಸದಾನಂದ ಗೌಡ ನೇತೃತ್ವದಲ್ಲಿ ಗುರುವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇದಕ್ಕೆ ಉಪನ್ಯಾಸಕರ ಸಂಘದ ಪದಾಧಿಕಾರಿಗಳು ಸಮ್ಮತಿಸಿದ್ದಾರೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಸುಗಮವಾಗಿ ನಡೆಯಲಿದೆ~ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಸುದ್ದಿಗಾರರಿಗೆ ತಿಳಿಸಿದರು.

ಪಿಯುಸಿ ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ, ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕೆ.ಟಿ.ಶ್ರೀಕಂಠೇಗೌಡ ಈ ಸಭೆಯಲ್ಲಿ ಹಾಜರಿದ್ದರು. `ರಾಜ್ಯದಲ್ಲಿ ಬರ ಇದೆ. ಈ ಸಂದರ್ಭದಲ್ಲಿ ಉಪನ್ಯಾಸಕರ ವೇತನ ಹೆಚ್ಚಳ ಮಾಡುವುದು ಸರಿಯಲ್ಲ. ಬರ ಸ್ಥಿತಿ ಸುಧಾರಿಸಿದ ಬಳಿಕ ನಮ್ಮ ಬೇಡಿಕೆಗಳ ಬಗ್ಗೆ ಚರ್ಚಿಸಲು ಸರ್ಕಾರ ಮುಕ್ತವಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಈ ಕಾರಣದಿಂದ ಯಾವುದೇ ಗಡುವು ನೀಡದೆ ಸರ್ಕಾರದ ಜತೆ ಸಹಕರಿಸಲು ತೀರ್ಮಾನಿಸಲಾಗಿದೆ~ ಎಂದು ಶ್ರೀಕಂಠೇಗೌಡ ಮತ್ತು ಪುರ್ಲೆ ಅವರು ನಂತರ ಸುದ್ದಿಗಾರರಿಗೆ ವಿವರಿಸಿದರು.

ವೇತನ ತಾರತಮ್ಯ ನಿವಾರಿಸುವಂತೆ ಒತ್ತಾಯಿಸಿ ನಾಲ್ಕು ದಿನ ಉಪನ್ಯಾಸಕರು ಮೌಲ್ಯಮಾಪನ ಬಹಿಷ್ಕರಿಸಿದ್ದರು. ಗುರುವಾರ ಮುಖ್ಯಮಂತ್ರಿ ಜತೆ ಸಭೆ ನಡೆಸಿ ಸೂಕ್ತ ತೀರ್ಮಾನಕ್ಕೆ ಬರುವುದಾಗಿ ಹೇಳಲಾಗಿತ್ತು. ಆ ಪ್ರಕಾರ ಸಭೆ ನಡೆದಿದ್ದು, ಬೇಡಿಕೆ ಈಡೇರಿಸಲು ಸರ್ಕಾರ ಮುಕ್ತವಾಗಿದೆ ಎಂದು ಸಚಿವ ಕಾಗೇರಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.