ADVERTISEMENT

ಬಸ್ ಡಿಕ್ಕಿ: ವಿದ್ಯಾರ್ಥಿನಿ ಸಾವು

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2012, 19:35 IST
Last Updated 20 ಫೆಬ್ರುವರಿ 2012, 19:35 IST

ಬೆಂಗಳೂರು: ತಮಿಳುನಾಡು ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದು ಎಂಬಿಎ ವಿದ್ಯಾರ್ಥಿನಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ  ಘಟನೆ ಹೊಸೂರು ರಸ್ತೆಯ ರೂಪೇನ ಅಗ್ರಹಾರದ ಬಳಿ ಭಾನುವಾರ ರಾತ್ರಿ ನಡೆದಿದೆ.

ದೆಹಲಿ ಮೂಲದ ವಿನಿತಾ ಕುಮಾರಿ (22) ಮೃತಪಟ್ಟವರು. ನಗರದ ಎಲೆಕ್ಟ್ರಾನಿಕ್‌ಸಿಟಿಯಲ್ಲಿರುವ ಸಿಂಬಯೊಸಿಸ್ ಇನ್‌ಸ್ಟಿಟ್ಯೂಟ್ ಆಫ್ ಬ್ಯುಸಿನೆಸ್ ಮ್ಯಾನೇಜ್‌ಮೆಂಟ್ (ಎಸ್‌ಐಬಿಎಂ) ಕಾಲೇಜಿನಲ್ಲಿ ಎಂಬಿಎ ಓದುತ್ತಿದ್ದ ಅವರು ಕಾಲೇಜಿನ ವಿದ್ಯಾರ್ಥಿನಿಲಯದಲ್ಲಿ ವಾಸವಾಗಿದ್ದರು. ಅವರ ಪೋಷಕರು ದೆಹಲಿಯಲ್ಲಿ ನೆಲೆಸಿದ್ದಾರೆ. ಅವರ ತಂದೆ ವಿನೋದ್ ಕುರೀಲ್ ಅವರು ವಿಮಾ ಕಂಪೆನಿಯೊಂದರಲ್ಲಿ ಪ್ರಾದೇಶಿಕ ವ್ಯವಸ್ಥಾಪಕರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿನಿತಾ ಅವರು ಸಹಪಾಠಿ ಅಮನ್ ಎಂಬುವರ ಜತೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಬಸ್‌ನ ಚಾಲಕ, ಅಮನ್ ಅವರ ಬೈಕ್‌ಗೆ ಹಿಂದಿನಿಂದ ವಾಹನ ಗುದ್ದಿಸಿದ್ದಾನೆ. ಈ ವೇಳೆ ರಸ್ತೆಯ ಎಡ ಭಾಗಕ್ಕೆ ಬಿದ್ದ ವಿನಿತಾ ತಲೆ ಮೇಲೆ ಅದೇ ಬಸ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಅಮನ್ ಅವರಿಗೆ ತರಚಿದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಮವಾರ ಬೆಳಿಗ್ಗೆ ವಿನಿತಾ ಅವರ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಕುಟುಂಬ ಸದಸ್ಯರಿಗೆ ಒಪ್ಪಿಸಲಾಯಿತು. ಮಡಿವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.