ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯವು ಮುಂದಿನ ಶೈಕ್ಷಣಿಕ ವರ್ಷದಿಂದ ಇಂಟಿಗ್ರೇಟೆಡ್ ಬಿ.ಇಡಿ ತರಬೇತಿ ಕಾರ್ಯಕ್ರಮವನ್ನು ಆರಂಭಿಸಲಿದೆ ಎಂದು ಶಿಕ್ಷಣತಜ್ಞ ಡಾ.ಎಂ.ಎಸ್.ತಳವಾರ್ ತಿಳಿಸಿದರು.
ಸಹಕಾರನಗರದ ಕಾವೇರಿ ಬಿ.ಇಡಿ ಕಾಲೇಜಿನಲ್ಲಿ ಪ್ರಥಮ ವರ್ಷದ ತರಗತಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಪಠ್ಯಕ್ರಮ ಸಿದ್ಧವಾಗುವ ಹಂತದಲ್ಲಿದ್ದು, 4 ವರ್ಷಗಳ ಈ ತರಬೇತಿ ಕಾರ್ಯಕ್ರಮಕ್ಕೆ ಪಿಯುಸಿ ತೇರ್ಗಡೆಯಾದ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದಾಗಿದೆ. ಈಗಾಗಲೇ ಪ್ರಾಯೋಗಿಕವಾಗಿ ಕೆಲವು ಕಾಲೇಜುಗಳಲ್ಲಿ ಈ ಕೋರ್ಸ್ ಪರಿಚಯಿಸಲಾಗಿದ್ದು, ಶೀಘ್ರದಲ್ಲೇ ಇತರೆ ಕಾಲೇಜುಗಳಿಗೂ ವಿಸ್ತರಣೆಯಾಗಲಿದ್ದು, ಇದರಿಂದ ಮತ್ತಷ್ಟು ಒಳ್ಳೆಯ ಕೆಲಸಗಳನ್ನು ಶಿಕ್ಷಕರ ತರಬೇತಿ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗಲಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ಗೃಹವಿಜ್ಞಾನ, ಎಂಜಿನಿಯರಿಂಗ್, ಎಂಬಿಬಿಎಸ್ ಮತ್ತಿತರ ಕೋರ್ಸ್ಗಳನ್ನು ಪೂರ್ಣಗೊಳಿಸಿರುವ ವಿದ್ಯಾರ್ಥಿಗಳೂ ಬಿ.ಇಡಿ ಕೋರ್ಸ್ಗೆ ದಾಖಲಾತಿ ಪಡೆಯುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದ್ದು, ಅದಕ್ಕನುಗುಣವಾಗಿ ಈ ತರಬೇತಿ ಕಾರ್ಯಕ್ರಮವನ್ನು ಮಾರ್ಪಡಿಸಬೇಕಾದ ಅಗತ್ಯವಿದೆ ಎಂದರು.
ಕಾವೇರಿ ಸಮೂಹ ಶಿಕ್ಷಣಸಂಸ್ಥೆಗಳ ಅಧ್ಯಕ್ಷ ಬಿ.ಎಂ.ದೇವರಾಜಪ್ಪ ಮಾತನಾಡಿ, ‘ಇಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ದೇಶದ ಮೂಲೆಮೂಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ಸಂಗತಿ. ಕಾಲೇಜಿನಲ್ಲಿ ಒಳ್ಳೆಯ ಶಿಕ್ಷಕವೃಂದ ಹಾಗೂ ಹಲವಾರು ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಉತ್ತಮಶಿಕ್ಷಕರಾಗಿ ಹೊರಹೊಮ್ಮಬೇಕು ಎಂದು ಸಲಹೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.