ಬೆಂಗಳೂರು: ನಗರದ ಅಂಬೇಡ್ಕರ್ ವೀದಿಯಲ್ಲಿರುವ ಬಿಎಸ್ಎನ್ಎಲ್ ಕಚೇರಿಯಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದ ಆಕಸ್ಮಿಕ ಅಗ್ನಿ ಅನಾಹುತದಲ್ಲಿ ಕೆಲ ದಾಖಲೆಗಳು ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ.
`ಬೆಳಿಗ್ಗೆ 4.15ರ ಸುಮಾರಿಗೆ ಕಟ್ಟಡದ ಮೂರನೇ ಮಹಡಿಯಲ್ಲಿರುವ ಬಿಎಸ್ಎನ್ಎಲ್ ಕಚೇರಿಗೆ ಬೆಂಕಿ ಹೊತ್ತಿಕೊಂಡಿದೆ. ಕಚೇರಿ ಒಳಭಾಗದಿಂದ ದಟ್ಟ ಹೊಗೆ ಹೊರಬರುತ್ತಿರುವುದನ್ನು ಕಂಡ ಮಂಜುಳಾ ಎಂಬುವರು, ಕೂಡಲೇ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಆರು ವಾಹನಗಳಲ್ಲಿ ಸ್ಥಳಕ್ಕೆ ತೆರಳಿದ 20 ಸಿಬ್ಬಂದಿ, ಸುಮಾರು ಅರ್ಧ ತಾಸು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು' ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಷಣ್ಮುಗಪ್ಪ `ಪ್ರಜಾವಾಣಿ'ಗೆ ತಿಳಿಸಿದರು.
ಶಾರ್ಟ್ ಸರ್ಕಿಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ. ದೂರು ಬಂದ ಎಂಟು ನಿಮಿಷಗಳಲ್ಲೇ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದಾರೆ. ಆದರೆ, ಕಚೇರಿಯ ಬಾಗಿಲು, ಕಿಟಕಿಗಳನ್ನು ಮುಚ್ಚಿದ್ದರಿಂದ ಕಾರ್ಯಾಚರಣೆ ಆರಂಭಿಸುವುದು ವಿಳಂಬವಾಯಿತು. ಅಂತಿಮವಾಗಿ ಕಿಟಕಿ ಗಾಜು ಒಡೆದು ಕಚೇರಿ ಪ್ರವೇಶಿಸಿದ ಸಿಬ್ಬಂದಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು ಎಂದು ಅಗ್ನಿಶಾಮಕ ಅಧಿಕಾರಿಗಳು ಮಾಹಿತಿ ನೀಡಿದರು.
ಘಟನೆಯಲ್ಲಿ ಕಂಪ್ಯೂಟರ್ಗಳು, ಪೀಠೋಪಕರಣಗಳು, ಅಲ್ಮೆರಾಗಳು ಹಾಗೂ ಕೆಲ ದಾಖಲೆಗಳು ಸುಟ್ಟು ಹೋಗಿವೆ. ಕಚೇರಿಯ ಅಧಿಕಾರಿಗಳು ಪರಿಶೀಲನೆ ನಡೆಸಿ ನಷ್ಟದ ಪ್ರಮಾಣದ ಬಗ್ಗೆ ತಿಳಿಸುವುದಾಗಿ ಹೇಳಿದ್ದಾರೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.