ADVERTISEMENT

ಬಿಜೆಪಿಯಲ್ಲಿ ಒಗ್ಗಟ್ಟು ಕ್ಷೀಣ: ಸಂಸದ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2012, 19:30 IST
Last Updated 24 ಮಾರ್ಚ್ 2012, 19:30 IST

ಮಹದೇವಪುರ:  `ಕೇವಲ ಗೆಲುವಿಗೋಸ್ಕರ ರಾಜಕಾರಣ ಮಾಡುವುದರಲ್ಲಿ ಅರ್ಥವಿಲ್ಲ. ಸಮಾಜದಲ್ಲಿ ಪಾರದರ್ಶಕ ಮತ್ತು ಪರಿಶುದ್ಧ ಬದಲಾವಣೆಯನ್ನು ತರುವ ನಿಟ್ಟಿನಲ್ಲಿ ರಾಜಕಾರಣ ಮಾಡಬೇಕಾಗಿದೆ~ ಎಂದು ಸಂಸದ ಅನಂತಕುಮಾರ ಹೆಗಡೆ ಅಭಿಪ್ರಾಯಪಟ್ಟರು.

ಇಲ್ಲಿಗೆ ಸಮೀಪದ ಮಾರತ್‌ಹಳ್ಳಿಯಲ್ಲಿ ಇತ್ತೀಚೆಗೆ ನಡೆದ ನಗರ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿದ ಬಳಿಕ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, `ಪಕ್ಷದ ಸಂಘಟನೆಯಲ್ಲಿ ಸಹಬಾಳ್ವೆ ಬಹುಮುಖ್ಯವಾಗಿದೆ. ಒಂದು ವೇಳೆ ಸಹಬಾಳ್ವೆ ಎನ್ನುವುದು ಇಲ್ಲದ್ದಿದ್ದಲ್ಲಿ ಪಕ್ಷ ಸೂತ್ರ ಇಲ್ಲದ ಗಾಳಿಪಟದಂತೆ ನೆಲಕಚ್ಚುವುದು ಖಚಿತ. ಹಾಗಾಗಿ ಪ್ರತಿಯೊಬ್ಬರೂ ಪರಸ್ಪರ ಪ್ರೀತಿ, ಸೌರ್ಹದತೆಯಿಂದ ಕೆಲಸ ಮಾಡಬೇಕು~ ಎಂದು ಕಿವಿಮಾತು ಹೇಳಿದರು.

`ಇತ್ತೀಚಿನ ದಿನಗಳಲ್ಲಿ ಪಕ್ಷದಲ್ಲಿ ಒಗ್ಗಟ್ಟು ಕಡಿಮೆಯಾಗುತ್ತಿದೆ. ಪಕ್ಷದಲ್ಲಿ ಎಲ್ಲರೂ ಸಮಾನರು. ಪಕ್ಷವೇ ದೊಡ್ಡದು ಎಂಬುದನ್ನು ಅರಿತುಕೊಂಡು ಮುನ್ನಡೆಯಬೇಕು. ರಾಜಕಾರಣಿಗಳಿಗೆ ಸಾರ್ವಜನಿಕ ಮುಖವಿದ್ದಾಗ ಮಾತ್ರ ಸರ್ವರೂ ಗೌರವಿಸುತ್ತಾರೆ. ಪ್ರತಿಯೊಬ್ಬ ಕಾರ್ಯಕರ್ತ ಮನಸ್ಫೂರ್ತಿಯಿಂದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು. ಅಂದಾಗ ಮಾತ್ರ ಸಂಘಟನೆ ಬದುಕನ್ನು ನೀಡುತ್ತದೆ~ ಎಂದರು.

ಶಾಸಕ ಮುನಿರಾಜು ಮಾತನಾಡಿದರು. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯ ಎಂ.ವೇಣುಗೋಪಾಲ ಅಧ್ಯಕ್ಷತೆ ವಹಿಸಿದ್ದರು. ಮೇಯರ್ ಪಿ. ಶಾರದಮ್ಮ, ರಾಜ್ಯ ಬಿಜೆಪಿ ಕಾರ್ಯದರ್ಶಿ ಗೋಪಿನಾಥರೆಡ್ಡಿ, ನಗರ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಸಚ್ಚಿದಾನಂದಮೂರ್ತಿ, ಪಾಲಿಕೆ ಆಡಳಿತ ಪಕ್ಷದ ನಾಯಕ ಬಿ.ಆರ್. ನಂಜುಂಡಪ್ಪ, ಮಹದೇವಪುರ ಕ್ಷೇತ್ರ ಘಟಕದ ಅಧ್ಯಕ್ಷ ಜಯಚಂದ್ರರೆಡ್ಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.