ADVERTISEMENT

ಬಿಜೆಪಿ: ನಗರದ 15 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹೆಸರು ಪ್ರಕಟ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2013, 20:14 IST
Last Updated 5 ಏಪ್ರಿಲ್ 2013, 20:14 IST

ಬೆಂಗಳೂರು: ನಗರದ 28 ವಿಧಾನಸಭಾ ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಬಿಜೆಪಿ ತನ್ನ ಮೊದಲ ಪಟ್ಟಿಯಲ್ಲಿ ಪ್ರಕಟಿಸಿದೆ. ಇನ್ನೂ 13 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಿಲ್ಲ.

ಕೆ.ಐ.ಎ.ಡಿ.ಬಿ ಭೂಹಗರಣದ ಆರೋಪದ ಹಿನ್ನೆಲೆಯಲ್ಲಿ ಹೆಬ್ಬಾಳದ ಹಾಲಿ ಶಾಸಕ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ಹೆಸರು ಮೊದಲ ಪಟ್ಟಿಯಲ್ಲಿ ಸೇರಿಲ್ಲ. ಸ್ಥಳೀಯ ಪಾಲಿಕೆ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನುವ ಕಾರಣಕ್ಕೆ ರಾಜರಾಜೇಶ್ವರಿ ನಗರದ ಹಾಲಿ ಶಾಸಕ ಎಂ.ಶ್ರೀನಿವಾಸ್ ಅವರ ಹೆಸರೂ ಪಟ್ಟಿಯಲ್ಲಿ ಇಲ್ಲ.

ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಚಿಕ್ಕಪೇಟೆ ಹಾಲಿ ಶಾಸಕ ಹೇಮಚಂದ್ರ ಸಾಗರ್ ಅವರು ಪಕ್ಷದ ಮುಖಂಡರಿಗೆ ತಿಳಿಸಿರುವ ಕಾರಣ ಆ ಕ್ಷೇತ್ರದಲ್ಲಿ ಬೇರೊಬ್ಬರನ್ನು ಕಣಕ್ಕೆ ಇಳಿಸಲು ನಿರ್ಧರಿಸಲಾಗಿದೆ. ಅಭ್ಯರ್ಥಿಗಾಗಿ ಬಿಜೆಪಿ ಹುಡುಕಾಟ ನಡೆಸಿದ್ದು, ಇತ್ಯರ್ಥವಾದ ಬಳಿಕ ಪ್ರಕಟಿಸಲಿದೆ.
ಯಶವಂತಪುರ ಕ್ಷೇತ್ರದಿಂದ ಕಳೆದ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಜಯ ಗಳಿಸಿದ್ದ ಶೋಭಾ ಕರಂದ್ಲಾಜೆ ಅವರು ಈಗ ಕೆಜೆಪಿ ಸೇರಿದ್ದಾರೆ. ಈ ಕ್ಷೇತ್ರದಲ್ಲೂ ಅಭ್ಯರ್ಥಿಗಾಗಿ ಹುಡುಕಾಟ ನಡೆದಿದೆ.

ಸಂಸದ ಪಿ.ಸಿ.ಮೋಹನ್ ಅವರು ಗಾಂಧಿನಗರ ಕ್ಷೇತ್ರದಿಂದ ಸ್ಪರ್ಧಿಸಲು ಆಸಕ್ತಿ ತೋರಿದ್ದರು. ಅವರ ಹೆಸರು ಕೂಡ ಮೊದಲ ಪಟ್ಟಿಯಲ್ಲಿ ಇಲ್ಲ. ಒಂದೆರಡು ದಿನದಲ್ಲಿ ಅವರ ಹೆಸರು ಪ್ರಕಟಿಸುವ ಸಾಧ್ಯತೆ ಇದೆ.

ಪುಲಕೇಶಿನಗರ, ಸರ್ವಜ್ಞನಗರ, ಮಹಾಲಕ್ಷ್ಮಿಲೇಔಟ್, ಶಾಂತಿನಗರ, ವಿಜಯನಗರ, ಗೋವಿಂದರಾಜನಗರ ಮತ್ತು ಚಾಮರಾಜಪೇಟೆ ಕ್ಷೇತ್ರಗಳಲ್ಲಿ ಹಾಲಿ ಕಾಂಗ್ರೆಸ್ ಶಾಸಕರು ಇದ್ದು, ಈ ಕ್ಷೇತ್ರಗಳಲ್ಲಿ ಯಾರನ್ನು ಕಣಕ್ಕೆ ಇಳಿಸಬೇಕು ಎನ್ನುವುದನ್ನು ಬಿಜೆಪಿ ಇನ್ನೂ ತೀರ್ಮಾನಿಸಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.