ADVERTISEMENT

ಬಿಜೆಪಿ ಬಲವರ್ಧನೆಗೆ 5 ತಂಡ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2012, 19:37 IST
Last Updated 15 ಡಿಸೆಂಬರ್ 2012, 19:37 IST

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೆಜೆಪಿಯ ಅಧ್ಯಕ್ಷ ಸ್ಥಾನ ವಹಿಸಿಕೊಂಡ ಬೆನ್ನಲ್ಲೇ ಪಕ್ಷದ ಬಲವರ್ಧನೆಗೆ ಮುಂದಾಗಿರುವ ಬಿಜೆಪಿ ವರಿಷ್ಠರು ಐದು ತಂಡಗಳನ್ನು ರಚಿಸಿದ್ದಾರೆ. ಈ ತಂಡಗಳು ಶುಕ್ರವಾರದಿಂದ ಪ್ರವಾಸ ಆರಂಭಿಸಿದ್ದು, ಇದೇ 30ರವರೆಗೆ ರಾಜ್ಯ ಪ್ರವಾಸ ಕೈಗೊಂಡು ಪಕ್ಷ ಸಂಘಟನೆಯಲ್ಲಿ ತೊಡಗಲಿವೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ನೇತೃತ್ವದ ತಂಡದಲ್ಲಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್, ಅಮರನಾಥ್ ಪಾಟೀಲ್ ಇದ್ದಾರೆ. ಈ ತಂಡ ಶಿವಮೊಗ್ಗ, ಚಿಕ್ಕಮಗಳೂರು, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದೆ.

ಮುಖ್ಯಮಂತ್ರಿ ಜಗದೀಶ ಶೆಟ್ಟರ್ ನೇತೃತ್ವದ ತಂಡದಲ್ಲಿ, ಸಂಸದ ಪ್ರಹ್ಲಾದ ಜೋಶಿ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ ಅವರಿದ್ದಾರೆ. ಈ ತಂಡ ಚಿಕ್ಕೋಡಿ ಮತ್ತು ಆಸುಪಾಸು ತಾಲ್ಲೂಕು,  ಬಾಗಲಕೋಟೆ, ವಿಜಾಪುರ, ಧಾರವಾಡ, ಗದಗ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಪ್ರವಾಸ ನಡೆಸಲಿದೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ ಕುಮಾರ್ ನೇತೃತ್ವದ ತಂಡ ತುಮಕೂರು, ಚಿತ್ರದುರ್ಗ, ದಾವಣಗೆರೆ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದೆ. ಶಾಸಕರಾದ ಅಶ್ವತ್ಥ ನಾರಾಯಣ, ಎಂ.ಬಿ. ನಂದೀಶ್, ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಪೂರ್ಣಿಮಾ ಪ್ರಕಾಶ್ ಅವರು ಈ ತಂಡದ ಸದಸ್ಯರು.

ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ನೇತೃತ್ವದ ತಂಡ ಮಂಡ್ಯ, ಚಾಮರಾಜನಗರ, ಮೈಸೂರು, ಹಾಸನ, ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದೆ. ಸಂಸದ ನಳಿನ್ ಕುಮಾರ್ ಕಟೀಲು ಮತ್ತಿತರರು ಈ ತಂಡಲ್ಲಿದ್ದಾರೆ.

ಉಪ ಮುಖ್ಯಮಂತ್ರಿ ಆರ್. ಅಶೋಕ ನೇತೃತ್ವದ ತಂಡ, ಬೀದರ್, ಗುಲ್ಬರ್ಗ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.