ADVERTISEMENT

ಬೀಡಿ ಕಾರ್ಮಿಕ ಮಕ್ಕಳ ವಿದ್ಯಾರ್ಥಿ ವೇತನಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2012, 19:50 IST
Last Updated 22 ಫೆಬ್ರುವರಿ 2012, 19:50 IST

ಬೆಂಗಳೂರು: ಬೀಡಿ ಕಾರ್ಮಿಕರ ಮಕ್ಕಳಿಗೆ ಸರ್ಕಾರ ನೀಡುತ್ತಿದ್ದ ವಿದ್ಯಾರ್ಥಿ ವೇತನ ನಿಲ್ಲಿಸಿರುವುದನ್ನು ಖಂಡಿಸಿ ನಗರ ಜಿಲ್ಲಾ ಬೀಡಿ ಕಾರ್ಮಿಕರ ಸಂಘದ ಸದಸ್ಯರು ಶಿವಾನಂದ ವೃತ್ತದ ಬಳಿ ಇರುವ ಬೀಡಿ ಕಾರ್ಮಿಕರ ಕಲ್ಯಾಣ ನಿಧಿ ಕಚೇರಿ ಎದುರು ಬುಧವಾರ ಧರಣಿ ನಡೆಸಿದರು.

ಸಂಘದ ಅಧ್ಯಕ್ಷ ವಿ.ಕೋದಂಡರಾಮ ಮಾತನಾಡಿ `ಒಂದರಿಂದ ಎಂಟನೇ ತರಗತಿಯಲ್ಲಿ ಓದುತ್ತಿರುವ ಬೀಡಿ ಕಾರ್ಮಿಕರ ಮಕ್ಕಳಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ವಿದ್ಯಾರ್ಥಿ ವೇತನವನ್ನು ನಿಲ್ಲಿಸಿದ್ದು, ಇದರಿಂದ ಬಡ ಕುಟುಂಬಗಳ ಮಕ್ಕಳ ಕಲಿಕೆಯ ಆಸೆ ಬಿದ್ದು ಹೋಗಿದೆ. ಮಕ್ಕಳು ಕೂಡಾ ಪೋಷಕರಂತೆ ಕೂಲಿ ಕೆಲಸ ಮಾಡುವ ಸ್ಥತಿ ನಿರ್ಮಾಣವಾಗಿದೆ~ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಸುಮಾರು 10 ಲಕ್ಷ ಬೀಡಿ ಕಾರ್ಮಿಕರಿದ್ದು, ಸರ್ಕಾರದ ಈ ನೀತಿಯಿಂದಾಗಿ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಕಾರ್ಮಿಕರ ಲಕ್ಷಾಂತರ ಮಕ್ಕಳು ಶಿಕ್ಷಣ ವಂಚಿತರಾಗುತ್ತಾರೆ. 1976ರ ಬೀಡಿ ಕಾರ್ಮಿಕರ ಕಲ್ಯಾಣ ನಿಧಿ ಕಾನೂನನ್ನು ಸರ್ಕಾರ ಇನ್ನೂ ಜಾರಿಗೆ ತರದಿರುವುದು ಖಂಡನೀಯ.
 
ಶೀಘ್ರವೇ ನಮ್ಮ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡಬೇಕು. ಇಲ್ಲವಾದರೆ ಇದೇ ಫೆ.28ರಿಂದ ತೀವ್ರ ಹೋರಾಟ ನಡೆಸುವುದಾಗಿ ಪ್ರತಿಭಟನಾಕಾರರು ಸರ್ಕಾರಕ್ಕೆ ಎಚ್ಚರಿಸಿದರು. ಕೂಲಿ ಕಾರ್ಮಿಕರು ಹಾಗೂ ಅವರ ಮಕ್ಕಳು ಧರಣಿಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.