ADVERTISEMENT

ಬೆಂಗಳೂರಿನ ಪಾತ್ರ ಮಹತ್ತರ: ಪಾಟೀಲ

ಎಲೆಕ್ಟ್ರಾನಿಕ್ ಚಿಪ್ ವಿನ್ಯಾಸ, ಸಂಶೋಧನೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2013, 19:47 IST
Last Updated 2 ಸೆಪ್ಟೆಂಬರ್ 2013, 19:47 IST

ಬೆಂಗಳೂರು: ರಾಜ್ಯದಲ್ಲಿ ಪ್ರತಿವರ್ಷ 45 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮುಗಿಸಿ ಎಂಜಿನಿಯರ್‌ಗಳಾಗಿ ಹೊರಹೊಮ್ಮುತ್ತಿದ್ದು, ಮಾಹಿತಿ ಮತ್ತು ಸಂವಹನ ತಂತ್ರಜ್ಞಾನದ ಅಭಿವೃದ್ಧಿಯಲ್ಲಿ ತಮ್ಮ ಸೇವೆ ಸಲ್ಲಿಸಬೇಕು ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಎಸ್.ಆರ್.ಪಾಟೀಲ ಸಲಹೆ ನೀಡಿದರು.

ಮಾಹಿತಿ ತಂತ್ರಜ್ಞಾನ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆ ಮತ್ತು ಮ್ಯಾನುಫ್ಯಾಕ್ಚರರ್ಸ್‌ ಅಸೋಸಿಯೇಷನ್ ಫಾರ್ ಇನ್‌ಫಾರ್‌ಮೇಷನ್ ಟೆಕ್ನಾಲಜಿ (ಎಂಎಐಟಿ) ವತಿಯಿಂದ ನಗರದಲ್ಲಿ ಹಮ್ಮಿಕೊಂಡಿದ್ದ `ರೆಗ್ಯುಲೇಟರಿ ಅಂಡ್ ಆಪರೇಷನಲ್ ಇಶ್ಯೂಸ್' ಕುರಿತ ಕಾರ್ಯಗಾರದಲ್ಲಿ ಮಾತನಾಡಿದರು.

ಎಲೆಕ್ಟ್ರಾನಿಕ್ ಚಿಪ್ ವಿನ್ಯಾಸ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಬೆಂಗಳೂರು ಮಹತ್ತರವಾದ ಪಾತ್ರ ನಿರ್ವಹಿಸುತ್ತಿದೆ. 396 ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳು ಹಾಗೂ 85 ಎಲೆಕ್ಟ್ರಾನಿಕ್ ಚಿಪ್ ವಿನ್ಯಾಸದ ಕಂಪೆನಿಗಳು ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿವೆ. ಈ ಸಂಸ್ಥೆಗಳು ವೃತ್ತಿಪರ ಶಿಕ್ಷಣ ಸಂಸ್ಥೆಗಳು, ವಿಶ್ವವಿದ್ಯಾಲಯಗಳೊಂದಿಗೆ ಜಂಟಿಯಾಗಿ ಕಾರ್ಯಕ್ರಮ ಹಮ್ಮಿಕೊಂಡು ವಿದ್ಯಾರ್ಥಿಗಳಿಗೆ ಅಗತ್ಯ ಮಾಹಿತಿಗಳನ್ನು ನೀಡಬೇಕು ಎಂದು ಸೂಚಿಸಿದರು.

ಚೀನಾ, ಇಸ್ರೇಲ್, ತೈವಾನ್ ಮತ್ತು ದಕ್ಷಿಣ ಕೊರಿಯಾ ದೇಶಗಳಲ್ಲಿ ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಡಿಸೈನ್ ಅಂಡ್ ಮ್ಯಾನುಫ್ಯಾಕ್ಚರ್ (ಇಎಸ್‌ಡಿಎಂ) ವಲಯದಲ್ಲಿ ಗೃಹ ಕೈಗಾರಿಕೆಗಳು ಹೆಚ್ಚಾಗಿ ತೊಡಗಿಸಿಕೊಂಡಿವೆ. ಈ ದೇಶಗಳಲ್ಲಿ ಇಂತಹ ಕೈಗಾರಿಕೆಗಳಿಗೆ ಸರ್ಕಾರದಿಂದ ಹೆಚ್ಚಿನ ಬೆಂಬಲವೂ ಇದೆ. ಅಂತೆಯೇ ರಾಜ್ಯದಲ್ಲಿಯೂ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಪಾತ್ರ ಹೆಚ್ಚು ಇದ್ದು, ಅವುಗಳ ಅಭಿವೃದ್ಧಿಗೆ ಅಗತ್ಯ ಬೆಂಬಲ ನೀಡಲಾಗುವುದು ಎಂದರು.

ಇಸ್ರೇಲ್‌ನಲ್ಲಿ ಎರಡು ಲಕ್ಷ ವೃತ್ತಿಪರ ತಂತ್ರಜ್ಞರಿದ್ದಾರೆ. ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಾಂ ಕಂಪೆನಿಗಳು ನೂರಾರು ಕೋಟಿ ಡಾಲರ್ ಮೌಲ್ಯದ ಉತ್ಪನ್ನಗಳನ್ನು ಜಾಗತಿಕ ಮಟ್ಟದಲ್ಲಿ ರಫ್ತು ಮಾಡುತ್ತಿವೆ.  ಸಂಶೋಧನೆ ಮತ್ತು ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಈ ಕಂಪೆನಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.