ADVERTISEMENT

ಬೆತ್ತನಗೆರೆ ಶಂಕರನ ಸಹಚರನ ಮೇಲೆ ಹಲ್ಲೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2013, 19:30 IST
Last Updated 6 ಡಿಸೆಂಬರ್ 2013, 19:30 IST

ಬೆಂಗಳೂರು: ಕುಖ್ಯಾತ ರೌಡಿ ಬೆತ್ತನಗೆರೆ ಶಂಕರನ ಸಹಚರ ರಂಗನಾಥ್‌ (30) ಎಂಬಾತನ ಮೇಲೆ ದುಷ್ಕರ್ಮಿಗಳು ಎಚ್‌ಎಎಲ್‌ ಸಮೀಪದ ಯಮ್ಮಲೂರು ಬಳಿ ಗುರುವಾರ ರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.

ಟಿಪ್ಪರ್‌ ಮತ್ತು ಮಣ್ಣೆತ್ತುವ ಯಂತ್ರಗಳನ್ನು ಇಟ್ಟುಕೊಂಡಿರುವ ರಂಗ­ನಾಥ್‌, ಯಮ್ಮಲೂರಿನ ವ್ಯಕ್ತಿಯೊಬ್ಬ­ರಿಂದ ರಾತ್ರಿ ಹಣ ಪಡೆದುಕೊಂಡು ಕಾರಿನಲ್ಲಿ ನೆಲಮಂಗಲಕ್ಕೆ ವಾಪಸ್‌ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.

ಆತನ ವಾಹನವನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕಣ್ಣಿಗೆ ಕಾರದ ಪುಡಿ ಎರಚಿ ಕತ್ತು, ಹೊಟ್ಟೆ ಹಾಗೂ ಎದೆಯ ಭಾಗಕ್ಕೆ ನಾಲ್ಕೈದು ಬಾರಿ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಣಕಾಸು ವ್ಯವಹಾರದಲ್ಲಿನ ಭಿನ್ನಾಭಿಪ್ರಾಯದ ಕಾರಣಕ್ಕೆ ದುಷ್ಕರ್ಮಿಗಳು ಆತನ ಮೇಲೆ ಹಲ್ಲೆ ನಡೆಸಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಅಪರಾಧ ಹಿನ್ನೆಲೆಯುಳ್ಳ ರಂಗನಾಥ್‌ ವಿರುದ್ಧ ನೆಲಮಂಗಲ ಠಾಣೆಯಲ್ಲಿ ಕೊಲೆ, ದರೋಡೆ, ಕೊಲೆ ಯತ್ನ ಪ್ರಕರಣಗಳು ದಾಖಲಾಗಿವೆ. ಅಲ್ಲದೇ, ನೆಲಮಂಗಲ ಠಾಣೆಯ ರೌಡಿಪಟ್ಟಿಯಲ್ಲಿ ಆತನ ಹೆಸರಿದೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ. ಎಚ್‌ಎಎಲ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.