ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿರುವ ಮಹಾಸಭಾದ ಅಧ್ಯಕ್ಷ ಭೀಮಣ್ಣ ಖಂಡ್ರೆ ಅವರು, `ವೀರಶೈವರು, ಮಠಾಧೀಶರು, ಹರ-ಗುರು-ಚರ ಮೂರ್ತಿಗಳ ಬೆಂಬಲದಿಂದ ಅಧಿಕಾರಕ್ಕೆ ಬಂದ ಸರ್ಕಾರ ಸಮಾಜದ ಬೆನ್ನಿಗೆ ಚೂರಿ ಇರಿದಿದೆ~ ಎಂದು ಟೀಕಿಸಿದ್ದಾರೆ.
ವೀರಶೈವ ಮಹಾಸಭಾಕ್ಕೆ ಪದಾಧಿಕಾರಿಗಳ ಆಯ್ಕೆಗೆ ಚುನಾವಣಾ ಪ್ರಕ್ರಿಯೆ ಜಾರಿಯಲ್ಲಿದೆ. ಇಂಥ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕೆಲವರ ಪಿತೂರಿಗೆ ಕಿವಿಗೊಟ್ಟು ಮಹಾಸಭಾಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿರುವುದು ಸಂವಿಧಾನಬಾಹಿರ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಆಡಳಿತಾಧಿಕಾರಿಯ ನೇಮಕಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದರೂ ಸರ್ಕಾರ ಅದನ್ನು ಗಮನಕ್ಕೆ ತೆಗೆದುಕೊಂಡಿಲ್ಲ. ಅಲ್ಲದೆ, ಪದಾಧಿಕಾರಿಗಳ ನೇಮಕಕ್ಕೆ ಚುನಾವಣೆ ಪ್ರಕ್ರಿಯೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಆಡಳಿತಾಧಿಕಾರಿಯ ನೇಮಕದ ಅವಶ್ಯಕತೆ ಇಲ್ಲ ಎಂದು ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಆದರೆ ಸರ್ಕಾರವೇ ಈಗ ಆಡಳಿತಾಧಿಕಾರಿಯನ್ನು ನೇಮಕ ಮಾಡಿರುವುದು ಖಂಡನಾರ್ಹ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.