ADVERTISEMENT

ಭಾರತೀಯ ವಿದ್ಯಾರ್ಥಿಗಳಿಗೆ ಕಾಲ್ಪಟ್ಟಿ: ಎಐಡಿಎಸ್‌ಓ ಖಂಡನೆ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2011, 18:30 IST
Last Updated 2 ಫೆಬ್ರುವರಿ 2011, 18:30 IST


ಬೆಂಗಳೂರು: ಅಮೆರಿಕದ ಟ್ರೈವ್ಯಾಲಿ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿದ್ದ ಭಾರತೀಯ ವಿದ್ಯಾರ್ಥಿಗಳ ಕಾಲಿಗೆ ರೇಡಿಯೊ ಕಾಲರ್ ಅಳವಡಿಸಿದ ಅಲ್ಲಿನ ವಲಸೆ ಹಾಗೂ ಸುಂಕ ವಸೂಲಿ ಅಧಿಕಾರಿಗಳ ಕ್ರಮವನ್ನು ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‌ಓ)ನ ರಾಜ್ಯ ಸಮಿತಿ ಖಂಡಿಸಿದೆ.

ಈ ಕುರಿತು ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ ಅಧ್ಯಕ್ಷ ವಿ.ಎನ್.ರಾಜಶೇಖರ್,   ಕಾರ್ಯದರ್ಶಿ ಡಾ.ಎನ್.ಪ್ರಮೋದ್ ಅವರು, ‘ಈ ಘಟನೆಯು ಮಾನವ ಹಕ್ಕುಗಳ ಸಂಪೂರ್ಣ ಉಲ್ಲಂಘನೆಯಾಗಿದೆ’ ಎಂದು ಟೀಕಿಸಿದ್ದಾರೆ.‘ಟ್ರೈವ್ಯಾಲಿ ವಿ.ವಿ.ಯು ಅಕ್ರಮ ಎಸಗಿದ್ದರೆ ಅದರ ವಿರುದ್ಧ ಕ್ರಮ ಕೈಗೊಳ್ಳಬೇಕೆ ಹೊರತು, ಯಾವುದೇ ತಪ್ಪು ಮಾಡದ ವಿದ್ಯಾರ್ಥಿಗಳನ್ನು ಅತಂತ್ರಗೊಳಿಸುವುದು ಸರಿಯಲ್ಲ. ಈ ಪ್ರಕರಣದಲ್ಲಿ ವಿದ್ಯಾರ್ಥಿಗಳನ್ನು ಬಲಿಪಶು ಮಾಡಲಾಗಿದೆ’ ಎಂದು ಟೀಕಿಸಿದ್ದಾರೆ.

‘ಜಾಗತೀಕರಣದ ನಂತರ ಶಿಕ್ಷಣದ ವ್ಯಾಪಾರೀಕರಣ ಹೆಚ್ಚಾದ  ಹಿನ್ನೆಲೆಯಲ್ಲಿ ಕುಖ್ಯಾತ ಖಾಸಗಿ ಶಿಕ್ಷಣ ಸಂಸ್ಥೆಗಳು ಹಾಗೂ ವಿ.ವಿ.ಗಳು ತಲೆಯೆತ್ತುತ್ತಿವೆ ಎಂದು ಆರೋಪಿಸಿದರು.

 ವಿದ್ಯಾರ್ಥಿಗಳಿಂದ ಅತ್ಯಧಿಕ ಶುಲ್ಕವನ್ನು ವಸೂಲಿ ಮಾಡುವುದರಲ್ಲಿ ಇರುವ ಆಸಕ್ತಿ, ಗುಣಮಟ್ಟದ ಶಿಕ್ಷಣವನ್ನು ನೀಡುವುದರಲ್ಲಿ ಕಂಡು ಬರುತ್ತಿಲ್ಲ. ಇಂಥ ಸನ್ನಿವೇಶದಲ್ಲಿ ಆ ಸಂಸ್ಥೆಗಳು ಶೈಕ್ಷಣಿಕ ನೀತಿ-ನಿಯಮಗಳನ್ನು ಉಲ್ಲಂಘಿಸುವುದರಲ್ಲಿ ಯಾವ ಸಂಶಯವೂ ಇಲ್ಲ. ಆದರೆ ಸಮಸ್ಯೆಗೆ ಒಳಗಾಗುವವರು ಮಾತ್ರ ವಿದ್ಯಾರ್ಥಿಗಳು’ ಎಂದು ಅಭಿಪ್ರಾಯಪಟ್ಟಿರುವ ಅವರು, ಕೂಡಲೇ ಈ ಕ್ರಮವನ್ನು ಹಿಂತೆಗೆದುಕೊಳ್ಳುವಂತೆ ಕೆಂದ್ರ ಸರ್ಕಾರವು ಅಮೆರಿಕದ ಮೇಲೆ ಒತ್ತಡ ಹಾಕಬೇಕು. ಈ ವಿದ್ಯಾರ್ಥಿ ವಿರೋಧಿ ಕ್ರಮವನ್ನು ಖಂಡಿಸಲು ಅಂತರರಾಷ್ಟ್ರೀಯ ವಿದ್ಯಾರ್ಥಿ ಸಮುದಾಯವು ಭಾರತೀಯ ವಿದ್ಯಾರ್ಥಿಗಳೊಂದಿಗೆ ತನ್ನ ದನಿಗೂಡಿಸಬೇಕು ಎಂದು ಮನವಿ ಮಾಡಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.