ADVERTISEMENT

ಭ್ರಷ್ಟಾಚಾರ ಮುಕ್ತ ವಾತಾವರಣ ನಿರ್ಮಾಣಕ್ಕೆ ಸ್ವಾಮೀಜಿ ಸಲಹೆ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2012, 19:30 IST
Last Updated 6 ಫೆಬ್ರುವರಿ 2012, 19:30 IST

ನೆಲಮಂಗಲ: `ಸರ್ಕಾರಿ ನೌಕರರು ಭ್ರಷ್ಟ ವ್ಯವಸ್ಥೆಯನ್ನು ವಿರೋಧಿಸಿ, ಭ್ರಷ್ಟಾಚಾರ ಮುಕ್ತ ವಾತಾವರಣ ನಿರ್ಮಾಣ ಮಾಡಬೇಕು~ ಎಂದು ಬಸವಣ್ಣದೇವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದರು.

ಪಟ್ಟಣದ ಬಸವಣ್ಣದೇವರ ಮಠದಲ್ಲಿ ಸರ್ಕಾರಿ ನೌಕರರ ಸಂಘವು ಏರ್ಪಡಿಸಿದ್ದ ವಿಭಾಗ ಮಟ್ಟದ ಸರ್ಕಾರಿ ನೌಕರರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, `ನೌಕರರು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ಕಾಯಕದಲ್ಲಿ ಕೈಲಾಸ ಕಾಣುವಂತಾಗಬೇಕು~ ಎಂದು ಸಲಹೆ ನೀಡಿದರು.

ಸಂಘದ ಅಧ್ಯಕ್ಷ ಎಲ್.ಬೈರಪ್ಪ ಮಾತನಾಡಿ, `ಸರ್ಕಾರಿ ನೌಕರರಿಗೆ ಆರನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ನೌಕರರಿಗೆ ಕಾನೂನು ರಕ್ಷಣೆ ಒದಗಿಸಬೇಕು ಮತ್ತು ಖಾಲಿ ಇರುವ ಹುದ್ದೆಗಳನ್ನು ಶೀಘ್ರವೇ ಭರ್ತಿ

ಮಾಡಬೇಕು. ಆರೋಗ್ಯ ಭಾಗ್ಯ ಯೋಜನೆಯನ್ನು ಅನುಷ್ಠಾನಗೊಳಿಸಬೇಕು~ ಎಂದು ಒತ್ತಾಯಿಸಿದರು.
ಸಂಘದ ಖಜಾಂಚಿ ಡಾ.ಚೌಡಯ್ಯ, `ಸರ್ಕಾರಿ ನೌಕರರ ಸಮರ್ಪಕ ಸೇವೆಯಿಂದ ರಾಜ್ಯ ಸರ್ಕಾರ ರಾಷ್ಟ್ರೀಯ ಮನ್ನಣೆಗೆ ಪಾತ್ರವಾಗಿದೆ. ನೌಕರರು ಇನ್ನಷ್ಟು ಕ್ರಿಯಾಶೀಲರಾಗಿ ಕೆಲಸ ಮಾಡಬೇಕು~ ಎಂದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಹೊಂಬಯ್ಯ, ಪ್ರಧಾನ ಕಾರ್ಯದರ್ಶಿ ರಂಗೇಗೌಡ, ತಹಶೀಲ್ದಾರ್ ಅನಿಲ್‌ಕುಮಾರ್, ಕೆ.ಜಿ.ಭೀಮರಾಜು, ರೇವಣಸಿದ್ದಯ್ಯ ಪಾಲ್ಗೊಂಡಿದ್ದರು.

ಸಹಕರಿಸಲು ಮನವಿ: ಪಟ್ಟಣದ 80 ಅಡಿ ರಸ್ತೆಯ ಅಗಲೀಕರಣ ಕಾಮಗಾರಿಗಾಗಿ ರಸ್ತೆ ಬದಿಯ ಮರಗಳನ್ನು ತೆರವುಗೊಳಿಸುತ್ತಿದ್ದ ವೇಳೆ ಕುಡಿಯುವ ನೀರು ಸರಬರಾಜಿನ ಪೈಪ್‌ಗಳು ಹೊಡೆದು ಹೋಗಿವೆ. ಇದರಿಂದ ನೀರು ಸರಬರಾಜು ವ್ಯವಸ್ಥೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಪುರಸಭೆ ಅಧ್ಯಕ್ಷ ಎ.ಪಿಳ್ಳಪ್ಪ, ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.