ADVERTISEMENT

ಮಕ್ಕಳಿಗೆ ಸಂಸ್ಕಾರದ ಶಿಕ್ಷಣವೂ ಅಗತ್ಯ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2012, 19:30 IST
Last Updated 18 ಆಗಸ್ಟ್ 2012, 19:30 IST

ಯಲಹಂಕ: `ಮಕ್ಕಳಿಗೆ ಪಠ್ಯ ಶಿಕ್ಷಣದ ಜೊತೆಗೆ ಸಂಸ್ಕಾರದ ಶಿಕ್ಷಣ ದೊರೆತಾಗ ಮಾತ್ರ ಅವರು ದೇಶದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ~ ಎಂದು ತುಮಕೂರು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಅವರು ಅಭಿಪ್ರಾಯಪಟ್ಟರು.

ಯಲಹಂಕ ಉಪನಗರದ ವೀರಶೈವ ಈಶ್ವರ ಸೇವಾ ಸಮಿತಿ ಆಶ್ರಯದಲ್ಲಿ ಜ್ಞಾನಜ್ಯೋತಿ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮ ಮತ್ತು ಬಸವಣ್ಣನವರ ಪುತ್ಥಳಿ ಅನಾವರಣ, ನೂತನ ಶಾಲಾ ಕಟ್ಟಡದ ಶಂಕುಸ್ಥಾಪನೆ ಹಾಗೂ ರುದ್ರಮ್ಮ ಮತ್ತು ಬಿ.ಎಸ್.ಚನ್ನಬಸಪ್ಪ ಕಲಾಕುಟೀರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಶಾಸಕ ಎಸ್.ಆರ್.ವಿಶ್ವನಾಥ್ ಮಾತನಾಡಿ, ಉಪನಗರದ 56 ಉದ್ಯಾನವನಗಳಿಗೆ ದೇಶಕ್ಕಾಗಿ ಹೋರಾಡಿದ ಮಹಾನ್ ಪುರುಷರ ಹೆಸರನ್ನು ಇಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಸಂಸ್ಥೆಯವರು ಉದ್ಯಾನಕ್ಕೆ ಬಸವಣ್ಣನವರ ಹೆಸರನ್ನು ಇಡಬೇಕೆಂದು ಮನವಿ ಮಾಡಿದ್ದ ಹಿನ್ನೆಲೆಯಲ್ಲಿ  ಒಂದು ಉದ್ಯಾನವನಕ್ಕೆ ಅವರ ಹೆಸರನ್ನು ನಾಮಕರಣ ಮಾಡಲಾಗಿದೆ ಎಂದು ಅವರು ಹೇಳಿದರು.

ಜಿ.ಪಂ. ಸದಸ್ಯೆ ವಾಣಿಶ್ರೀ ವಿಶ್ವನಾಥ್, ಬಿಬಿಎಂಪಿ ಸದಸ್ಯರಾದ ಎಂ.ಮುನಿರಾಜು, ಡಾ.ಗೀತಾ ಶಶಿಕುಮಾರ್, ನಿವೃತ್ತ ಐಎಎಸ್ ಅಧಿಕಾರಿ ಜಿ.ವಿ. ಕೊಂಗವಾಡ, ಸಂಸ್ಥೆಯ ಅಧ್ಯಕ್ಷ ವೈ.ಸಿ.ಪ್ರಕಾಶ್, ಮಾಜಿ ಅಧ್ಯಕ್ಷ ಎನ್.ಸಿ. ರಾಜಶೇಖರಯ್ಯ, ಪ್ರಾಂಶುಪಾಲ ವಿ.ಎಸ್. ನಂಜುಂಡಪ್ಪ ಮೊದಲಾದವರು ಉಪಸ್ಥಿತರಿದ್ದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.