ಬೆಂಗಳೂರು: ನಗರದ ನಂದಿನಿ ಬಡಾವಣೆಯ ಆಕ್ಸ್ಫರ್ಡ್ ಶಾಲೆಯಲ್ಲಿ `ಶಿಕ್ಷಣ ಹಕ್ಕು ಕಾಯ್ದೆ~ಯಡಿ (ಅರ್ಟಿಇ) ದಾಖಲಾದ ಮಕ್ಕಳ ಮೇಲೆ ದೌರ್ಜನ್ಯ ನಡೆದಿದೆ ಎಂಬ ಆರೋಪ ಕುರಿತು ತನಿಖೆಗೆ ಆದೇಶಿಸಲಾಗಿದೆ. ವರದಿ ಬಂದ ಬಳಿಕ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
`ಆಕ್ಸ್ಫರ್ಡ್ ಶಾಲೆಯಲ್ಲಿ ಆರ್ಟಿಇ ಅಡಿಯಲ್ಲಿ ಪ್ರವೇಶ ಪಡೆದ ಮಕ್ಕಳ ಕೂದಲು ಕತ್ತರಿಸಿ ದೌರ್ಜನ್ಯ ನಡೆಸಲಾಗಿದೆ. ಶಾಲೆಯ ಆಡಳಿತ ಮಂಡಳಿ ವಿರುದ್ಧ ಸರ್ಕಾರ ಯಾವ ಕ್ರಮ ಜರುಗಿಸಿದೆ~ ಎಂದು ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ವಿಧಾನಸಭೆಯಲ್ಲಿ ಸೋಮವಾರ ಶೂನ್ಯವೇಳೆಯಲ್ಲಿ ಪ್ರಶ್ನಿಸಿದರು. ಈ ಕುರಿತು ಉತ್ತರ ನೀಡಿದ ಸಚಿವರು, ಪ್ರಕರಣದ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಆದೇಶ ನೀಡಿರುವುದಾಗಿ ತಿಳಿಸಿದರು.
`ಆರ್ಟಿಇ ಜಾರಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಸರ್ಕಾರಕ್ಕೆ ಭರವಸೆ ನೀಡಿವೆ. ಯಾವುದೇ ಶಾಲೆಗಳಲ್ಲೂ ಮಕ್ಕಳ ಮೇಲೆ ದೌರ್ಜನ್ಯ ನಡೆಯಲು ಸರ್ಕಾರ ಅವಕಾಶ ನೀಡುವುದಿಲ್ಲ~ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.