ಬೆಂಗಳೂರು: ‘ಇಪ್ಪತ್ತೊಂದು ವರ್ಷದೊಳಗಿನವರಿಗೆ ಮದ್ಯ ಮಾರಾಟ ಮಾಡುತ್ತಿರುವ ಮದ್ಯದಂಗಡಿಗಳ ಪರವಾನಿಗೆ ರದ್ದು ಮಾಡಬೇಕು ಎಂಬ ಮನವಿಯನ್ನು ಕೇಂದ್ರ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಸಲ್ಲಿಸಿ’ ಎಂದು ಅರ್ಜಿದಾರರಿಗೆ ಹೈಕೋರ್ಟ್ ನಿರ್ದೇಶಿಸಿದೆ.
‘ಅಬಕಾರಿ ಕಾಯ್ದೆ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ 17 ವರ್ಷದ ಲಯ ಸಜನ್ ಮಾರಿಯಂಡ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ಬಿ.ಎಂ.ಶ್ಯಾಮ್ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿ, ಅರ್ಜಿ ವಿಲೇವಾರಿ ಮಾಡಿತು.
ಆಕ್ಷೇಪಣೆ ಏನು?: ‘ರಾಜ್ಯದಲ್ಲಿ 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡಬಾರದು ಎಂಬ ನಿಯಮವನ್ನು ಅಬಕಾರಿ ಇಲಾಖೆ ರೂಪಿಸಿದೆ. ಆದರೆ, ಈ ಸಂಬಂಧ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಇದರ ಪರಿಣಾಮ ರಾಜ್ಯದಾದ್ಯಂತ ಬಾಲಕ–ಬಾಲಕಿ
ಯರಿಗೆ ಸುಲಭವಾಗಿ ಮದ್ಯ ಲಭ್ಯವಾಗುತ್ತಿದೆ. ಇದು ಯುವ ಸಮುದಾಯದಕ್ಕೆ ಅಪಾಯಕಾರಿ ಬೆಳವಣಿಗೆ’ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.