ಬೆಂಗಳೂರು: ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಮಂಗಳವಾರ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.
ಮಳವಳ್ಳಿ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಮಂಗಳವಾರ ನಡೆಯುವ ಬಹಿರಂಗ ಸಭೆಗಳಲ್ಲಿ ಕುಮಾರಸ್ವಾಮಿ ಹಾಗೂ ಪಕ್ಷದ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಬುಧವಾರ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರೊಂದಿಗೆ ಸೋಮವಾರ ಕುಮಾರಸ್ವಾಮಿ ಅವರು ಚರ್ಚೆ ನಡೆಸಿದ್ದಾರೆ. ಸಾರ್ವಜನಿಕ ಸಮಾರಂಭ ಏರ್ಪಡಿಸಿ ಸದ್ಯದಲ್ಲೇ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎನ್ನಲಾಗಿದೆ. ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಸಿದ್ಧವಾಗಿದೆ. ಯುಗಾದಿ ಹಬ್ಬಕ್ಕೂ ಮೊದಲೇ ಪಟ್ಟಿ ಬಿಡುಗಡೆಯಾಗಲಿದೆ. ಬಂಡಾಯಕ್ಕೆ ಆಸ್ಪದ ಆಗಬಾರದು ಎಂಬ ಕಾರಣಕ್ಕೆ, ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವ ಕ್ಷೇತ್ರಗಳಲ್ಲಿ ಸ್ಥಳೀಯ ಮುಖಂಡರ ಮನವೊಲಿಸುವ ಕಾರ್ಯ ಮುಂದುವರಿದಿದೆ ಎಂದು ಗೊತ್ತಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.