ADVERTISEMENT

ಮಳೆಗೆ ಮೂವರು ಬಲಿ: ಅಧಿಕಾರಿಗಳ ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2017, 19:35 IST
Last Updated 25 ಅಕ್ಟೋಬರ್ 2017, 19:35 IST

ಬೆಂಗಳೂರು: ‘ನಗರದಲ್ಲಿ ಅ. 13ರಂದು ರಾತ್ರಿ ಮಳೆ ನೀರಿನಲ್ಲಿ ಮೂವರು ಕೊಚ್ಚಿಹೋದ ಪ್ರಕರಣ ಸಂಬಂಧ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ ಆರೋಪದಡಿ ಪ್ರಕರಣ ದಾಖಲಿಸಬೇಕು’ ಎಂದು ಆಗ್ರಹಿಸಿ ಕಿತ್ತೂರು ರಾಣಿ ಚನ್ನಮ್ಮ ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ ಶಿವಾನಂದಮೂರ್ತಿ ಮತ್ತು ಅಂಬೇಡ್ಕರ್ ಯುವಸೇನೆಯ ಅಧ್ಯಕ್ಷ ಕೋದಂಡರಾಮ್ ಅವರು ಮಹಾಲಕ್ಷ್ಮಿ ಲೇಔಟ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

‘ಮಳೆಯಿಂದಾಗಿ ಮಹಾಲಕ್ಷ್ಮಿ ಲೇಔಟ್‌ನ ಹಲವು ಪ್ರದೇಶಗಳು ಜಲಾವೃತ್ತಗೊಂಡು ಸಾಕಷ್ಟು ನಷ್ಟ ಉಂಟಾಗಿದೆ. ವಾಸುದೇವ ಭಟ್‌, ನಿಂಗಮ್ಮ, ಪುಷ್ಪಲತಾ ಅವರು ಕಾಲುವೆಯಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿದ್ದಾರೆ. ರಸ್ತೆ ಬದಿಯ ಚರಂಡಿ ಹಾಗೂ ರಾಜಕಾಲುವೆಗಳ ಗೋಡೆಗಳನ್ನು ಕಳಪೆಯಾಗಿ ನಿರ್ಮಿಸಿದ್ದು ಇದಕ್ಕೆ ಕಾರಣ.’

‘ಈ ಸಾವುಗಳನ್ನು ಉದ್ದೇಶಪೂರಿತವಲ್ಲದ ಕೊಲೆ ಎಂದು ಪರಿಗಣಿಸಬೇಕು. ಗುತ್ತಿಗೆದಾರ, ಬಿಬಿಎಂಪಿ ಸಹಾಯಕ ಎಂಜಿನಿಯರ್‌, ಕಾರ್ಯಪಾಲಕ ಎಂಜಿನಿಯರ್‌ ಹಾಗೂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು’ ಎಂದು ದೂರಿನಲ್ಲಿ ಬರೆಯಲಾಗಿದೆ.

ADVERTISEMENT

ಈ ಬಗ್ಗೆ ಪೊಲೀಸ್‌ ಅಧಿಕಾರಿ, ‘ಮೃತಪಟ್ಟ ವ್ಯಕ್ತಿಗಳ ಕುಟುಂಬದವರು ಈಗಾಗಲೇ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ. ಈಗ ಮೂರನೇ ವ್ಯಕ್ತಿಗಳು ನೀಡಿರುವ ದೂರನ್ನು ಪರಿಶೀಲಿಸುತ್ತಿದ್ದೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.