ಬೆಂಗಳೂರು: ಪಾನಮತ್ತನಾಗಿ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿ ರಸ್ತೆ ವಿಭಜಕಕ್ಕೆ ವಾಹನವನ್ನು ಗುದ್ದಿಸಿದ ಮಾಜಿ ಸಚಿವರೊಬ್ಬರ ಪುತ್ರನ ವಿರುದ್ಧ ಹಲಸೂರುಗೇಟ್ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮಾಜಿ ಸಚಿವರೊಬ್ಬರ ಪುತ್ರನಾದ ರೋಹನ್ ಪ್ರೇಮ್ಸಾಗರ್ ಎಂಬುವರು ಶನಿವಾರ ರಾತ್ರಿ ಪಾನಮತ್ತರಾಗಿ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿಕೊಂಡು ರಿಚ್ಮಂಡ್ ರಸ್ತೆಯ ಮೇಲ್ಸೇತುವೆಯಲ್ಲಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ವಾಹನ ಗುದ್ದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಆದರೆ, ರೋಹನ್ ಅವರ ಕಾರು ಜಖಂಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅವರನ್ನು ಆಲ್ಕೋ ಮೀಟರ್ ಮೂಲಕ ತಪಾಸಣೆಗೆ ಒಳಪಡಿಸಿದಾಗ ಮದ್ಯ ಸೇವನೆ ಪ್ರಮಾಣ 108ರಷ್ಟಿತ್ತು. ಕಾನೂನು ಪ್ರಕಾರ ಮದ್ಯ ಸೇವನೆಯ ಪ್ರಮಾಣ 30ಕ್ಕಿಂತ ಹೆಚ್ಚಿದ್ದರೆ ಪ್ರಕರಣ ದಾಖಲಿಸಲಾಗುತ್ತದೆ. ಅಂತೆಯೇ ರೋಹನ್ ವಿರುದ್ಧ ಪಾನಮತ್ತ ಚಾಲನೆ ಮತ್ತು ಅಜಾಗರೂಕ ಚಾಲನೆ ಆರೋಪದಡಿ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. `ಅವರ ಕಾರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ~ ಎಂದೂ ಪೊಲೀಸರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.