ADVERTISEMENT

ಮಾಧ್ಯಮಗಳ ಸಹಕಾರ ಅಗತ್ಯ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2013, 20:26 IST
Last Updated 17 ಏಪ್ರಿಲ್ 2013, 20:26 IST

ಬೆಂಗಳೂರು: `ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಾರದರ್ಶಕವಾಗಿ ಚುನಾವಣೆ ನಡೆಸಲು ಮಾಧ್ಯಮಗಳ ಸಹಕಾರ ಅತ್ಯಗತ್ಯ' ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನಿಲ್ ಕುಮಾರ್ ಝಾ ಹೇಳಿದರು.

ನಗರದಲ್ಲಿ ಬುಧವಾರ ಬೆಂಗಳೂರು ಆಕಾಶವಾಣಿಯ ಪ್ರಾದೇಶಿಕ ಸುದ್ದಿ ವಿಭಾಗ ಏರ್ಪಡಿಸಿದ್ದ `ಚುನಾವಣಾ ವರದಿಗಾರಿಕೆ' ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

`ಚುನಾವಣಾ ಆಯೋಗವು ಪ್ರತಿಯೊಬ್ಬರಿಗೂ ಮತದಾನದ ಕುರಿತು ಜನಜಾಗೃತಿ ಮೂಡಿಸುತ್ತಿದೆ. ಮಹಿಳೆಯರು ಮತ್ತು ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮಾಧ್ಯಮಗಳು ಪ್ರೇರೇಪಿಸಬೇಕು. ಮಾಧ್ಯಮಗಳ ವರದಿ ಸಮಾಜದ ಮೇಲೆ ಪ್ರಭಾವ ಬೀರುವುದರಿಂದ ವಸ್ತುನಿಷ್ಠತೆಗೆ ಆದ್ಯತೆ ನೀಡಬೇಕು' ಎಂದು ಹೇಳಿದರು.

ಚುನಾವಣಾ ಆಯೋಗದ ವಿಶೇಷಾಧಿಕಾರಿ ಪಂಕಜ್ ಕುಮಾರ್ ಪಾಂಡೆ `ಚುನಾವಣಾ ಅಕ್ರಮಗಳನ್ನು ಪತ್ತೆ ಹಚ್ಚುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ ವಹಿಸುತ್ತವೆ. ನೀತಿ ಸಂಹಿತೆ ಉಲ್ಲಂಘನೆ ಮತ್ತು ಚುನಾವಣಾ ಅಕ್ರಮಗಳ ಪತ್ತೆಗೆ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಲಾಗುತ್ತಿದೆ. ಅಭ್ಯರ್ಥಿಗಳು ಪ್ರಚಾರಕ್ಕೆ ನವಮಾಧ್ಯಮಗಳ ಮೊರೆ ಹೋಗಿರುವುದು ಗಮನಕ್ಕೆ ಬಂದಿದ್ದು, ಅದರ ಕಡಿವಾಣಕ್ಕೂ ಕ್ರಮಕೈಗೊಳ್ಳಲಾಗಿದೆ' ಎಂದರು.ನವದೆಹಲಿ ಆಕಾಶವಾಣಿ ಕೇಂದ್ರದ ವಾರ್ತಾ ಸೇವಾ ವಿಭಾಗದ ಹೆಚ್ಚುವರಿ ಮಹಾನಿರ್ದೇಶಕಿ ವೀಣಾ ಜೈನ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.