ಯಲಹಂಕ: ಮಾನವ ಹಕ್ಕುಗಳನ್ನು ರಕ್ಷಿಸುವುದರ ಮೂಲಕ ಸಮಾಜದಲ್ಲಿ ಉತ್ತಮ ಶಿಕ್ಷಕರಾಗಿ ರೂಪುಗೊಳ್ಳಬೇಕು ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಡಾ.ಎಸ್.ಆರ್.ನಾಯಕ್ ಕರೆ ನೀಡಿದರು.
ಸಹಕಾರ ನಗರದ ಕಾವೇರಿ ಬಿಇಡಿ ಕಾಲೇಜಿನಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ನಾಯಕ್ ಅವರು ಮಾತನಾಡಿದರು.
`ಇಂದು ಶಿಕ್ಷಕರು ಮಾನವ ಹಕ್ಕುಗಳನ್ನು ರಕ್ಷಣೆ ಮಾಡುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿಯೂ ಈ ಬಗ್ಗೆ ಅರಿವು ಮೂಡಿಸಬೇಕಿದೆ. ಅವರನ್ನು ಸಮಾಜದಲ್ಲಿ ಪ್ರತಿಭಾವಂತ ವ್ಯಕ್ತಿಗಳನ್ನಾಗಿ ರೂಪಿಸಬೇಕಿದೆ ಎಂದು ಅವರು ಸಲಹೆ ನೀಡಿದರು.
ವಿದ್ಯಾರ್ಥಿಗಳಲ್ಲಿ ಮಾನಸಿಕ ಮತ್ತು ಬೌದ್ಧಿಕ ಜ್ಞಾನವನ್ನು ಬೆಳೆಸುವುದರ ಜೊತೆಗೆ ಓದುವ ಕೌಶಲ್ಯವನ್ನು ಬೆಳೆಸಿದಾಗ ನಮ್ಮ ದೇಶದ ಸಂಸ್ಕೃತಿ, ಪರಂಪರೆ ರಕ್ಷಿಸಿಕೊಳ್ಳಲು ಸಾಧ್ಯವಾಗುತ್ತದೆ. ಅಲ್ಲದೆ, ಮೂಲಭೂತ ಸವಲತ್ತುಗಳು ಪ್ರತಿಯೊಬ್ಬರಿಗೂ ತಲುಪಿಸುವುದರ ಜೊತೆಗೆ ಪ್ರಜಾಪ್ರಭುತ್ವದ ಅಡಿಗಲ್ಲು ಅಲುಗಾಡದಂತೆ ಪ್ರತಿಯೊಬ್ಬರೂ ಎಚ್ಚರ ವಹಿಸಬೇಕಿದೆ ಎಂದರು.
ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಕಾವೇರಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಬಿ.ಎಂ.ದೇವರಾಜಪ್ಪ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟಿಗಳಾದ ಕೆ.ಎನ್. ಮಂಜುನಾಥ್, ಡಿ.ಸಂತೋಷ್, ಬಿಇಡಿ ಕಾಲೇಜಿನ ಪ್ರಾಂಶುಪಾಲ ಡಾ.ಇ.ಬಿ.ರಾಜೇಶ್, ಡಿಇಡಿ ಕಾಲೇಜಿನ ಪ್ರಾಂಶುಪಾಲ ಎಸ್. ಆರ್.ಬಿಂದುಕುಮಾರ್ ಇದ್ದರು. ಉಪನ್ಯಾಸಕರಾದ ಶಿವಗುಂಡಪ್ಪ ಸ್ವಾಗತಿಸಿದರು. ವಿದ್ಯಾ ದೇಸಾಯಿ ಅವರು ವಂದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.