ಬೆಂಗಳೂರು: ಮಡಿವಾಳದಲ್ಲಿ ₹14 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಆಧುನಿಕ ಸೌಲಭ್ಯವುಳ್ಳ ಮಾರುಕಟ್ಟೆ ಕಾಮಗಾರಿಗೆ ಭಾನುವಾರ ಚಾಲನೆ ದೊರೆಯಿತು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತು ಮೇಯರ್ ಬಿ.ಎನ್. ಮಂಜುನಾಥ್ ರೆಡ್ಡಿ ಶಂಕುಸ್ಥಾಪನೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಬಿ.ಎನ್. ಮಂಜುನಾಥ್ ರೆಡ್ಡಿ, ‘ಮಹಾನಗರದ ನಾಗರಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಮಡಿವಾಳದಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಿಸಲಾಗುತ್ತಿದೆ’ ಎಂದು ಹೇಳಿದರು.
‘ಮಾರುಕಟ್ಟೆ ಪ್ರದೇಶದಲ್ಲಿ ಪ್ರತ್ಯೇಕ ವಾಹನ ನಿಲುಗಡೆ, ಶೌಚಾಲಯ, ಸ್ನಾನಗೃಹ ಮತ್ತು ವಿಶ್ರಾಂತಿ ಕೊಠಡಿಗಳು ಇರಲಿವೆ. ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ’ ಎಂದರು.
‘ಮಾರುಕಟ್ಟೆ ಮುಖ್ಯರಸ್ತೆಯನ್ನು ಈಗಾಗಲೇ ಕಾಂಕ್ರೀಟ್್ ರಸ್ತೆಯನ್ನಾಗಿ ಮಾಡಲಾಗಿದ್ದು, ಮಳೆ ನೀರು ಸರಾಗವಾಗಿ ಹರಿದು ಹೋಗುವ ವ್ಯವಸ್ಥೆ ಇದೆ. ಪ್ರತಿದಿನವೂ ಕಸದ ವಿಲೇವಾರಿಗೆ ಪಾಲಿಕೆಯು ಕ್ರಮ ಕೈಗೊಳ್ಳಲಿದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.