ಬೆಂಗಳೂರು: ‘ನಕ್ಸಲ್ ಹೋರಾಟಗಾರರನ್ನು ಮುಖ್ಯವಾಹಿನಿಗೆ ತರಲು ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ಜನಶಕ್ತಿ ಸಂಘಟನೆಯ ಅಧ್ಯಕ್ಷ ಪ್ರೊ. ನಗರಗೆರೆ ರಮೇಶ್ ಒತ್ತಾಯಿಸಿದರು.
ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಕ್ಸಲರು ಸಶಸ್ತ್ರ ಹೋರಾಟ ಕೈಬಿಟ್ಟರೆ ಅವರ ಜೊತೆ ಮಾತುಕತೆಗೆ ಸಿದ್ಧ ಎಂದು ಸರ್ಕಾರ ಪ್ರಕಟಿಸಿದೆ. ಹಾಗೆಯೇ ತಮ್ಮ ಮೇಲಿನ ಮೊಕದ್ದಮೆಗಳನ್ನು ಹಿಂತೆಗೆದುಕೊಂಡರೆ ಮುಖ್ಯವಾಹಿನಿಗೆ ಬರಲು ಸಿದ್ಧರಿದ್ದೇವೆ ಎಂದು ನಕ್ಸಲ್ ಹೋರಾಟಗಾರರಾದ ನೂರ್ ಜುಲ್ಫೀಕರ್ ಮತ್ತು ಸಿರಿಮನೆ ನಾಗರಾಜ್ ಹೇಳಿದ್ದಾರೆ. ಆದ್ದರಿಂದ ಸರ್ಕಾರ ಈ ಬಗ್ಗೆ ಶೀಘ್ರ ನಿರ್ಧಾರ ಕೈಗೊಳ್ಳಬೇಕು ಎಂದರು.
ಸಶಸ್ತ್ರ ಹೋರಾಟ ಕೈಬಿಟ್ಟು ಜನರ ಸಮಸ್ಯೆಗಳ ವಿರುದ್ಧ ಕಾನೂನಿನ ಚೌಕಟ್ಟಿನಲ್ಲಿ ಹೋರಾಟ ನಡೆಸುತ್ತೇವೆ ಎಂದು ನಕ್ಸಲ್ ಹೋರಾಟಗಾರರು ಅಭಿಪ್ರಾಯ ಮುಂದಿಟ್ಟಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹತ್ವದ ಬೆಳವಣಿಗೆ. ಆದ್ದರಿಂದ ನಕ್ಸಲರು ಸಮಾಜದ ಮುಖ್ಯವಾಹಿನಿಗೆ ಸೇರಲು ಅವಕಾಶ ನೀಡಬೇಕು ಎಂದರು.
ರಾಜ್ಯ ರೈತ ಸಂಘದ ಉಪಾಧ್ಯಕ್ಷ ಜೆ.ಎಂ.ವೀರಸಂಗಯ್ಯ, ದಲಿತ ಸಂಘರ್ಷ ಸಮಿತಿಯ ಮುಖಂಡ ಎನ್.ವೆಂಕಟೇಶ್ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.