ಬೆಂಗಳೂರು: ‘ವಿಧಾನಸಭಾ ಚುನಾವಣೆ ನೆಪದಲ್ಲಿ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್, ಸಾರಿಗೆ ಅಧಿಕಾರಿಗಳು ಹಾಗೂ ಪೊಲೀಸರನ್ನು ಬಳಸಿಕೊಂಡು ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ’ ಎಂದು ‘ರಾಜ್ಯ ಸರ್ಕಾರ ಹಾಗೂ ಸ್ವಾಮ್ಯ ಸಂಘ ಸಂಸ್ಥೆಗಳ ವಾಹನ ಚಾಲಕರ ಒಕ್ಕೂಟ’ದ ಅಧ್ಯಕ್ಷ ಎಂ.ಎನ್.ವೇಣುಗೋಪಾಲ್ ದೂರಿದ್ದಾರೆ.
ಈ ಬಗ್ಗೆ ನಗರ ಪೊಲೀಸ್ ಕಮಿಷನರ್ ಟಿ.ಸುನೀಲ್ ಕುಮಾರ್ಗೆ ದೂರು ನೀಡಿರುವ ಅವರು, ‘ಸಂಜೀವ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.
‘ಚುನಾವಣೆ ಕರ್ತವ್ಯಕ್ಕಾಗಿ ಸರ್ಕಾರ ಹಾಗೂ ಸರ್ಕಾರದ ಅಧೀನದ ಸಂಸ್ಥೆಗಳ ವಾಹನಗಳನ್ನು ಬಳಸಿಕೊಳ್ಳಲಾಗುತ್ತಿದೆ. ಅದಕ್ಕಾಗಿ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸಿ, ಏಕಾಏಕಿ ವಶಕ್ಕೆ ಪಡೆಯಲಾಗುತ್ತಿದೆ. ಆ ಸಂಬಂಧ ಯಾವುದೇ ನೋಟಿಸ್ ಕೂಡಾ ನೀಡುತ್ತಿಲ್ಲ. ಇದರಿಂದ ಚಾಲಕರು ಕಿರಿಕಿರಿ ಅನುಭವಿಸುತ್ತಿದ್ದಾರೆ’ ಎಂದು ವೇಣುಗೋಪಾಲ್ ದೂರಿನಲ್ಲಿ ತಿಳಿಸಿದ್ದಾರೆ.
‘ಈಗಾಗಲೇ 300 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನಾದರೂ ಸಾರಿಗೆ ಅಧಿಕಾರಿಗಳು ಹಾಗೂ ಪೊಲೀಸರು, ರಸ್ತೆಯಲ್ಲಿ ವಾಹನ ತಡೆದು ವಶಕ್ಕೆ ಪಡೆಯುವುದನ್ನು ಕೈ ಬಿಡಬೇಕು. ನಿಯಮ ಪ್ರಕಾರ ನಡೆದುಕೊಳ್ಳಬೇಕು. ಇಲ್ಲದಿದ್ದರೆ ಚುನಾವಣಾ ಆಯೋಗದ ಎದುರು ಉಪವಾಸ ಸತ್ಯಾಗ್ರಹ ನಡೆಸಲಿದ್ದೇವೆ’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.