ಬೆಂಗಳೂರು: ‘ರಾಜರಾಜೇಶ್ವರಿನಗರ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಅವರು ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯುವುದಿಲ್ಲ. ಜೆಡಿಎಸ್ ಅಭ್ಯರ್ಥಿಯನ್ನು ಹಿಂದೆ ಸರಿಯುವಂತೆ ಶುಕ್ರವಾರದೊಳಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಿರ್ದೇಶನ ನೀಡಲಿದ್ದಾರೆ’ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದರು.
ಜ್ಞಾನಭಾರತಿ ವಾರ್ಡ್ನಲ್ಲಿ ಮುನಿರತ್ನ ಪರ ಮತಯಾಚನೆ ಮಾಡಿ ಅವರು ಮಾತನಾಡಿದರು.
‘ಸೋಲುವ ಭಯದಿಂದ ವಿರೋಧಿಗಳು ಇಲ್ಲಸಲ್ಲದ ಆರೋಪ ಮತ್ತು ಸುಳ್ಳು ವದಂತಿಗಳನ್ನು ಹರಡುತ್ತಿದ್ದಾರೆ. ಈ ಮೂಲಕ ಕೀಳುಮಟ್ಟದ ರಾಜಕೀಯವನ್ನು ಮಾಡುತ್ತಿದ್ದಾರೆ’ ಎಂದರು.
‘ಈ ಕುರಿತು ಹೈಕಮಾಂಡ್ ಮತ್ತು ಕುಮಾರಸ್ವಾಮಿ ಅವರ ನಡುವೆ ಮಾತುಕತೆ ನಡೆದಿದ್ದು, ಅವರೇ ಅಧಿಕೃತವಾಗಿ ಮುನಿರತ್ನ ಅವರಿಗೆ ಬೆಂಬಲವನ್ನು ಘೋಷಿಸಲಿದ್ದಾರೆ’ ಎಂದರು.
‘ಇಪ್ಪತ್ತೈದು ವರ್ಷದಲ್ಲಿ ಆಗದ ಕೆಲಸ ಇಲ್ಲಿ ಆಗಿದೆ. ನಾಲ್ಕೂವರೆ ವರ್ಷದಿಂದ ನಾಪತ್ತೆಯಾಗಿದ್ದವರು ಚುನಾವಣೆ ಘೋಷಣೆಯಾಗುತ್ತಿದ್ದಂತೆ ಎಲ್ಲಿಂದಲೋ ಬಂದು ತಾವೇ ಗೆಲ್ಲಬೇಕೇಂದು ಫೇಸ್ಬುಕ್, ವಾಟ್ಸ್ಆ್ಯಪ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಮುನಿರತ್ನ ವಿರುದ್ಧ ವದಂತಿ ಹಬ್ಬಿಸುತ್ತಿದ್ದಾರೆ’ ಎಂದರು.
ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ, ‘ಐದು ವರ್ಷ ನಾನು ಮಾಡಿರುವ ಅಭಿವೃದ್ದಿ ಕೆಲಸಗಳನ್ನು ನೋಡಿ ನನಗೆ ಮತನೀಡಿ, ಜಾತಿ ಧರ್ಮ ನೋಡಿ ಮತ ಹಾಕುವುದು ಬೇಡ’ ಎಂದು ಮನವಿ ಮಾಡಿದರು.
* ಕಾಂಗ್ರೆಸ್ ಅಭ್ಯರ್ಥಿ ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯುವುದಿಲ್ಲ
- ಡಿ.ಕೆ.ಸುರೇಶ್
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.