ADVERTISEMENT

ಮುಳವಾಡ ಏತ ನೀರಾವರಿ ಯೋಜನೆಗೆ ಶೀಘ್ರ ಚಾಲನೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2012, 18:30 IST
Last Updated 2 ಆಗಸ್ಟ್ 2012, 18:30 IST

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ ವ್ಯಾಪ್ತಿಯಲ್ಲಿ ಬರುವ ಮುಳವಾಡ ಏತ ನೀರಾವರಿ ಯೋಜನೆಗೆ ಈಗಾಗಲೇ ಟೆಂಡರ್ ಕರೆಯಲಾಗಿದೆ. 15 ದಿನಗಳಲ್ಲಿ ಈ ಯೋಜನೆಗೆ ಶಂಕುಸ್ಥಾಪನೆ

ನೆರವೇರಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಗುರುವಾರ ತಿಳಿಸಿದರು.
ಕಾಂಗ್ರೆಸ್‌ನ ಎಂ.ಬಿ.ಪಾಟೀಲ್ ವಿಧಾನಸಭೆಯಲ್ಲಿ ಮಾಡಿದ ಪ್ರಸ್ತಾವಕ್ಕೆ ಉತ್ತರಿಸಿದ ಅವರು, ಈ ಯೋಜನೆಯಿಂದ 5 ರಿಂದ 6 ಲಕ್ಷ ಹೆಕ್ಟೇರ್‌ಗೆ ನೀರಾವರಿ ಸೌಲಭ್ಯ ದೊರೆಯಲಿದೆ. 7 ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.

ಕೃಷ್ಣಾ ನ್ಯಾಯಮಂಡಳಿ-2ರ ತೀರ್ಪು 2010ರ ಡಿಸೆಂಬರ್ 30ರಂದು ಬಂದಿದೆ. ಕೆಲವೊಂದು ಸ್ಪಷ್ಟನೆಗಳನ್ನು ಕೋರಿ ಮೇಲ್ಮನವಿ ಸಲ್ಲಿಸಿರುವುದರಿಂದ ನ್ಯಾಯಮಂಡಳಿ ಇನ್ನೂ ಅಧಿಸೂಚನೆ ಹೊರಡಿಸಿಲ್ಲ. ಆದರೂ ರಾಜಕೀಯ ಇಚ್ಛಾಶಕ್ತಿಯನ್ನು ಪ್ರದರ್ಶಿಸಿ ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿಗಳ ವಿಸ್ತೃತ ಯೋಜನಾ ವರದಿ ತಯಾರಿಸಲಾಗಿದೆ ಎಂದು ತಿಳಿಸಿದರು.

ಕಳೆದ ವರ್ಷ ಬಾಂಡ್ ಮೂಲಕ ಸಂಗ್ರಹಿಸಿರುವ 512 ಕೋಟಿ ರೂ ಸೇರಿದಂತೆ 1,668 ಕೋಟಿ ರೂ ಅನುದಾನ ಲಭ್ಯವಿದೆ. ವಿಸ್ತೃತ ಯೋಜನಾ ವರದಿ ಪ್ರಕಾರ ಪ್ರತಿ ವರ್ಷ ಹಣ ಬಿಡುಗಡೆ ಮಾಡಲಾಗುವುದು. ಮೊದಲ ವರ್ಷ ಅನುದಾನ ಕಡಿಮೆ ಇರುವುದು ಸಹಜ. ಕ್ರಮೇಣ ಹೆಚ್ಚಲಿದೆ. 3ನೇ ಹಂತದ ಯೋಜನೆಗೆ ಒಟ್ಟು 17,200 ಕೋಟಿ ರೂ ವೆಚ್ಚ ಮಾಡಲಾಗುವುದು. ಅಗತ್ಯವಿರುವ ಕಡೆ ಜಾಗತಿಕ ಟೆಂಡರ್ ಕರೆಯಲಾಗುವುದು. ಕೊಪ್ಪಳ ಜಿಲ್ಲೆಯಲ್ಲೂ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಸಂಬಂಧ ಸರ್ವೆ ಕಾರ್ಯ ನಡೆದಿದೆ ಎಂದು ಅವರು ತಿಳಿಸಿದರು.

ಇದಕ್ಕೂ ಮುಂಚೆ ಮಾತನಾಡಿದ ಪಾಟೀಲ್, ಈ ವರ್ಷ 1,205 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಇದು ಸಾಕಾಗುವುದಿಲ್ಲ. ಕನಿಷ್ಠ 3,500 ಕೋಟಿ ರೂಪಾಯಿ ನೀಡಬೇಕು. ಅಲ್ಲದೆ ಪ್ರತಿ ವರ್ಷ ಬಜೆಟ್‌ನಲ್ಲಿ ಐದು ಸಾವಿರ ಕೋಟಿ ರೂಪಾಯಿ ತೆಗೆದಿರಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು 50 ಸಾವಿರ ಕೋಟಿ ರೂಪಾಯಿ ಬೇಕಾಗುತ್ತದೆ. ಒಂದು ಲಕ್ಷ ಕೋಟಿ ರೂಪಾಯಿ ಬಜೆಟ್ ಮಂಡಿಸಿರುವ ಸರ್ಕಾರಕ್ಕೆ 50 ಸಾವಿರ ಕೋಟಿ ರೂಪಾಯಿ ನೀಡಲು ಆಗುವುದಿಲ್ಲವೇ ಎಂದು ಅವರು ಪ್ರಶ್ನಿಸಿದರು.

ಮೂರನೇ ಹಂತದ ಯೋಜನೆಗಳಿಗೆ 76 ಸಾವಿರ ಎಕರೆ ಭೂಸ್ವಾಧೀನ ಮಾಡಿಕೊಳ್ಳಬೇಕಾಗುತ್ತದೆ. 22 ಹಳ್ಳಿಗಳನ್ನು ಸ್ಥಳಾಂತರ ಮಾಡಬೇಕು. ಗುತ್ತಿಬಸವಣ್ಣ, ಚಿಮ್ಮಲಗಿ ಮತ್ತು ಮುಳವಾಡ ಏತ ನೀರಾವರಿ ಯೋಜನೆಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.

ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದರೆ ಕುಡಿಯುವ ನೀರಿಗಾಗಿ ಭಿಕ್ಷೆ ಬೇಡುವ ಸ್ಥಿತಿ ಬರುತ್ತಿರಲಿಲ್ಲ. ಈಗಲಾದರೂ ಹೆಚ್ಚಿನ ಹಣ ನೀಡಿ ಕಾಲಮಿತಿಯಲ್ಲಿ ಯೋಜನೆಗಳನ್ನು ಪೂರ್ಣಗೊಳಿಸಬೇಕು. ಮೂರನೇ ಹಂತದ ಯೋಜನೆಯ ಕಾಮಗಾರಿಗಳಿಗೆ ಜಾಗತಿಕ ಟೆಂಡರ್ ಕರೆಯಬೇಕು ಎಂದು ಎ.ಎಸ್.ಪಾಟೀಲ ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT