ಬೆಂಗಳೂರು: `ಮಳೆ ಸಂಬಂಧಿಸಿದ ಅನಾಹುತಗಳಿಗೆ ಅಧಿಕಾರಿಗಳೇ ನೇರ ಹೊಣೆ. ಚುನಾವಣಾ ನೀತಿ ಸಂಹಿತೆಯ ನೆಪ ಒಡ್ಡಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡದೆ ಅಧಿಕಾರಿಗಳು ನಿದ್ದೆ ಹೋಗಿದ್ದರು' ಎಂದು ಮೇಯರ್ ಡಿ.ವೆಂಕಟೇಶಮೂರ್ತಿ ಆಕ್ರೋಶ ವ್ಯಕ್ತಪಡಿಸಿದರು.
ಮುಂಗಾರಿನಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಬಿಬಿಎಂಪಿ ಪ್ರಧಾನ ಕಚೇರಿಯಲ್ಲಿ ಮಂಗಳವಾರ ಬಿಬಿಎಂಪಿ ಸದಸ್ಯರು ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
`ಕಳಪೆ, ಅನಧಿಕೃತ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳದಂತೆ ಹಿಂದಿನ ಆಯುಕ್ತರು ಸೂಚನೆ ನೀಡಿದ್ದರು. ಅಧಿಕಾರಿಗಳು ಎಲ್ಲ ಕೆಲಸವನ್ನು ಕೈಬಿಟ್ಟರು. ಜೊತೆಗೆ ಚುನಾವಣಾ ನೀತಿ ಸಂಹಿತೆಯ ನೆಪವೊಡ್ಡಿ ಅಧಿಕಾರಿಗಳು ಅಭಿವೃದ್ಧಿ ಕಾರ್ಯವನ್ನು ಮಾಡಲಿಲ್ಲ. ನೂತನ ಆಯುಕ್ತರು ಯಾರಾಗಲಿದ್ದಾರೆ ಎಂಬ ನಿರೀಕ್ಷೆಯಲ್ಲೇ ಅಧಿಕಾರಿಗಳು ಕಾಲ ಕಳೆದರು. ಮಳೆಗಾಲ ಎದುರಿಸಲು ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಲಿಲ್ಲ' ಎಂದು ಅವರು ಕಿಡಿಕಾರಿದರು.
`ಮೋರಿ ದುರಸ್ತಿ, ಹೂಳು ತೆಗೆಸಬೇಕಾದವರು ಅಧಿಕಾರಿಗಳು. ಇದನ್ನು ಬಿಬಿಎಂಪಿ ಸದಸ್ಯರು ಮಾಡಲು ಆಗುವುದಿಲ್ಲ. ನಾವು ಒತ್ತಡ ಹೇರುವ ಕೆಲಸ ಮಾಡಬಹುದು. ಆ ಕಾರ್ಯದ ಸಂಪೂರ್ಣ ಜವಾಬ್ದಾರಿ ಅವರದ್ದೇ. ಕೆಲಸ ಮಾಡದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ನೂತನ ಆಯುಕ್ತರಿಗೆ ತಿಳಿಸಲಾಗಿದೆ. ಕೆಲಸಗಳ್ಳ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು. ಕೆಲಸದಲ್ಲಿ ಉದಾಸೀನ ಮಾಡಿದವರನ್ನು ಮಾತೃ ಇಲಾಖೆಗೆ ಕಳುಹಿಸಿಕೊಡಲಾಗುವುದು' ಎಂದು ವೆಂಕಟೇಶಮೂರ್ತಿ ಎಚ್ಚರಿಸಿದರು.
`ವರ್ಷದಿಂದ ರಾಜಕಾಲುವೆ ಒತ್ತುವರಿ ತೆರವು ಮಾಡುವ ಕೆಲಸ ಸರಿಯಾಗಿ ಆಗಿಲ್ಲ. ಇದೊಂದು ಗಂಭೀರ ವಿಷಯ. ಮುಖ್ಯ ಎಂಜಿನಿಯರ್ (ರಾಜಕಾಲುವೆ) ಅನಂತಸ್ವಾಮಿ ವಿರುದ್ಧ ದೂರುಗಳು ಬಂದಿವೆ. ನಿರ್ಲಕ್ಷ್ಯ ಮಾಡುವ ಅಧಿಕಾರಿಗಳನ್ನು ಬದಲಾವಣೆ ಮಾಡುವಂತೆ ಆಯುಕ್ತರಿಗೆ ಸೂಚನೆ ನೀಡಲಾಗುವುದು' ಎಂದು ಅವರು ಸ್ಪಷ್ಟಪಡಿಸಿದರು.
`ಮಳೆ ಬಂದಾಗ ತಗ್ಗುಪ್ರದೇಶದಲ್ಲಿ ನೀರು ನಿಲ್ಲುವುದು ಸಹಜ. ನಗರದಲ್ಲಿ ಈಗ 25 ತಗ್ಗುಪ್ರದೇಶಗಳು ಇವೆ. ತಗ್ಗು ಪ್ರದೇಶದಲ್ಲಿ ನೀರು ನಿಲ್ಲದಂತೆ ಅಗತ್ಯ ಕ್ರಮ ಕೈಗೊಳ್ಳದಂತೆ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ. ಅರ್ಧಕ್ಕೆ ನಿಂತ ಕಾಮಗಾರಿಗಳನ್ನು ಕೂಡಲೇ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಸ್ತೆಗಳ ಗುಂಡಿ ಮುಚ್ಚುವ ಕಾರ್ಯ ಕೈಗೆತ್ತಿಕೊಳ್ಳಲು ಸೂಚಿಸಲಾಗಿದೆ' ಎಂದು ಅವರು ತಿಳಿಸಿದರು.
`ಮಳೆಯಿಂದಾದ ಅನಾಹುತದ ಬಗ್ಗೆ ಸಮಾಲೋಚನೆ ನಡೆಸಿದ ಮುಖ್ಯಮಂತ್ರಿಗಳು, ಎಲ್ಲ ಇಲಾಖೆಗಳ ಸಹಕಾರದಲ್ಲಿ 20 ಸಮಿತಿಗಳನ್ನು ರಚಿಸಿ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ 15 ದಿನಕ್ಕೊಮ್ಮೆ ಪ್ರಗತಿ ಪರಿಶೀಲನೆ ನಡೆಸುವಂತೆ ತಿಳಿಸಿದ್ದಾರೆ. ಜಂಟಿ ಆಯುಕ್ತರು, ವಲಯ ಮಟ್ಟದ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗಿದೆ'ಎಂದು ಅವರು ಹೇಳಿದರು.
ಬಿಬಿಎಂಪಿಗಾಗಿ ರೂ.25 ಕೋಟಿ ಅನುದಾನ ಬಿಡುಗಡೆಗೆ ಪ್ರಸ್ತಾವ
`ಪ್ರಕೃತಿ ವಿಕೋಪ ನಿಧಿಯಡಿ ಬಿಬಿಎಂಪಿಗೆ ರೂ 25 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪ್ರಸ್ತಾವ ಸಲ್ಲಿಸಲಾಗಿದೆ' ಎಂದು ಬಿಬಿಎಂಪಿ ಆಯುಕ್ತ ಲಕ್ಷ್ಮಿನಾರಾಯಣ ತಿಳಿಸಿದರು.
`ಪ್ರಕೃತಿ ವಿಕೋಪ ನಿಧಿಯಿಂದ ಕಂದಾಯ ಇಲಾಖೆ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಅನುದಾನ ಬಿಡುಗಡೆ ಮಾಡುತ್ತದೆ. ಬಿಬಿಎಂಪಿಗೆ ರಾಜ್ಯ ಸರ್ಕಾರದ ಪ್ರಕೃತಿ ವಿಕೋಪ ನಿಧಿಯಿಂದ ಅನುದಾನ ದೊರಕುತ್ತಿಲ್ಲ. ಬಿಬಿಎಂಪಿಗೂ ಅನುದಾನ ನೀಡಿದರೆ ತುರ್ತು ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಅನುಕೂಲವಾಗುತ್ತದೆ. ಈ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆದು ಗರಿಷ್ಠ ಅನುದಾನ ಬಿಡುಗಡೆಗೆ ಒತ್ತಡ ಹೇರಲಾಗುವುದು. ತುರ್ತು ಕಾಮಗಾರಿಗಳನ್ನು ನಡೆಸಲು ಕನಿಷ್ಠ ಪಕ್ಷ ್ಙ25 ಕೋಟಿ ಅನುದಾನ ಬೇಕಿದೆ' ಎಂದು ಅವರು ಅಭಿಪ್ರಾಯಪಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.