ADVERTISEMENT

`ಮೂಲಸೌಕರ್ಯವಿದ್ದರೂ ನಿರ್ವಹಣೆ ಕೊರತೆ'

​ಪ್ರಜಾವಾಣಿ ವಾರ್ತೆ
Published 1 ಜುಲೈ 2013, 19:44 IST
Last Updated 1 ಜುಲೈ 2013, 19:44 IST

ಬೆಂಗಳೂರು: `ಮೂಲಸೌಕರ್ಯ, ವೈದ್ಯ ಸಿಬ್ಬಂದಿಯಿದ್ದರೂ ಶೇ 70ರಷ್ಟು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ' ಎಂದು ಅಜೀಂ ಪ್ರೇಮ್‌ಜೀ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಪ್ ರಂಜೇಕರ್ ಅಭಿಪ್ರಾಯಪಟ್ಟರು.

ಕರ್ನಾಟಕ ಮಧುಮೇಹ ಸಂಸ್ಥೆಯು ನಗರದ ವೈಟ್‌ಫೀಲ್ಡ್‌ನಲ್ಲಿ ಶನಿವಾರ ಆಯೋಜಿಸಿದ್ದ ಮಧುಮೇಹ ಕಾಯಿಲೆ ಕುರಿತ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

`ಬಹುತೇಕ ಜಿಲ್ಲಾ ಆಸ್ಪತ್ರೆಗಳಲ್ಲಿ ವೈದ್ಯರು, ವೈದ್ಯಕೇತರ ಸಿಬ್ಬಂದಿ, ಮೂಲಸೌಕರ್ಯವೂ ಉತ್ತಮವಾಗಿರುತ್ತದೆ. ಆದರೆ ನಿರ್ವಹಣೆಯ ಕೊರತೆ ಎದ್ದುಕಾಣುತ್ತಿದೆ. ವೈದ್ಯಕೀಯ ಕ್ಷೇತ್ರಕ್ಕೆ ಕಾಲಿಡುವವರಲ್ಲಿ ಬಹುತೇಕರಿಗೆ ಬದ್ಧತೆ ಇಲ್ಲದಂತಾಗಿದೆ' ಎಂದು ವಿಷಾದ ವ್ಯಕ್ತಪಡಿಸಿದರು.

`ಅಭಿವೃದ್ಧಿಯ ಜತೆಯಲ್ಲಿಯೇ ಕುಡಿಯುವ ನೀರು, ಸ್ವಚ್ಛತೆ, ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆಯನ್ನು ಸರ್ಕಾರ ಒದಗಿಸಬೇಕಿದೆ. ಬೌರಿಂಗ್ ಸರ್ಕಾರಿ ಆಸ್ಪತ್ರೆಯು ಜಯದೇವ ಆಸ್ಪತ್ರೆಯಂತೆ ಖಾಸಗಿ ಆಸ್ಪತ್ರೆಗಳಿಗಿಂತ ಹೆಚ್ಚಿನ ಗುಣಮಟ್ಟದ ಸೇವೆಯನ್ನು ಒದಗಿಸಲು ಸಾಧ್ಯವಾದರೆ ವೈದ್ಯಕೀಯ ಕ್ಷೇತ್ರದಲ್ಲಿ ತುಸು ಸಾಧಿಸಿದ ಖುಷಿ ಪಡೆಯಬಹುದು' ಎಂದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ, `ವೈದ್ಯಕೀಯ ಕ್ಷೇತ್ರಕ್ಕೆ ಸವಾಲೊಡ್ಡುತ್ತಿರುವ ಮಧುಮೇಹ ಕುರಿತು ಉನ್ನತ ಮಟ್ಟದ ಸಂಶೋಧನೆಗಳು ನಡೆಯಬೇಕು. ಇದಕ್ಕೆ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ' ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.