ADVERTISEMENT

ಮೆಟ್ರೋ 2ನೇ ಹಂತಕ್ಕೆ ಶೀಘ್ರ ಮಂಜೂರಾತಿ

​ಪ್ರಜಾವಾಣಿ ವಾರ್ತೆ
Published 5 ಮೇ 2012, 19:30 IST
Last Updated 5 ಮೇ 2012, 19:30 IST

ಬೆಂಗಳೂರು: `ನಮ್ಮ ಮೆಟ್ರೊ~ದ ಎರಡನೇ ಹಂತದ ಯೋಜನೆಗೆ ಕೇಂದ್ರ ಸರ್ಕಾರ ಶೀಘ್ರ ಮಂಜೂರಾತಿ ನೀಡಲಿದೆ ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ಕಮಲ್‌ನಾಥ್ ಭರವಸೆ ನೀಡಿದ್ದಾರೆ.

ದೆಹಲಿಯಲ್ಲಿ ಇತ್ತೀಚೆಗೆ ತಮ್ಮನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ನೇತೃತ್ವದ ರಾಜ್ಯದ ನಿಯೋಗಕ್ಕೆ ಈ ಭರವಸೆ ನೀಡಿದ್ದಾರೆ.

`26 ಸಾವಿರ ಕೋಟಿ ರೂಪಾಯಿ ವೆಚ್ಚದ ಎರಡನೇ ಹಂತದ ಯೋಜನೆಯಲ್ಲಿ 72 ಕಿ.ಮೀ. ಉದ್ದದ ಮೆಟ್ರೊ ಮಾರ್ಗವನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಇದರ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ಅಂತರ್ ಇಲಾಖಾ ಸಮಾಲೋಚನಾ ಪ್ರಕ್ರಿಯೆಗೆ ಕಳುಹಿಸಿಕೊಡಲಾಗಿದೆ. ಈ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಸಚಿವಾಲಯದ ಜತೆಗೂಡಿ ಬೆಂಗಳೂರು ಮೆಟ್ರೊ ರೈಲು ನಿಗಮವು ಕಾರ್ಯ ನಿರ್ವಹಿಸಬೇಕು~ ಎಂದು ಅವರು ಸೂಚನೆ ನೀಡಿದ್ದಾರೆ.

`ಕೇಂದ್ರ ಸಚಿವರ ಉನ್ನತಾಧಿಕಾರ ಸಮಿತಿಯು ಇನ್ನು ಎರಡು ಮೂರು ತಿಂಗಳ ಒಳಗೆ ಯೋಜನೆಗೆ ಅಂತಿಮ ಒಪ್ಪಿಗೆ ನೀಡಲಿದೆ. ಎರಡನೇ ಹಂತದ ಯೋಜನೆಯಿಂದ ಬೆಂಗಳೂರಿನಲ್ಲಿ ಸುಗಮ ಸಂಚಾರ ವ್ಯವಸ್ಥೆಯ ಕನಸು ನನಸಾಗಿ ನಗರ ಜೀವನದ ಗುಣಮಟ್ಟ ಹೆಚ್ಚಾಗಲಿದೆ~ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, `ಎರಡೂ ಯೋಜನೆಗಳ ಪ್ರಗತಿ ಬಗ್ಗೆ ನಾನೇ ಖುದ್ದು ಮೇಲ್ವಿಚಾರಣೆ ನಡೆಸುವೆ. ಮೊದಲನೇ ಹಂತವನ್ನು ಶೀಘ್ರ ಪೂರ್ಣಗೊಳಿಸಲು ಹಾಗೂ ಎರಡನೇ ಹಂತದ ಕಾಮಗಾರಿಗಳನ್ನು ತ್ವರಿತವಾಗಿ ಪ್ರಾರಂಭಿಸಲು ಅಗತ್ಯ ಸಹಕಾರ ನೀಡುವೆ~ ಎಂದು ಹೇಳಿದ್ದಾರೆ.

ನಿಯೋಗದಲ್ಲಿ ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿ ವಿ.ಧನಂಜಯುಮಾರ್, ಮುಖ್ಯ ಕಾರ್ಯದರ್ಶಿ ಎಸ್.ವಿ.ರಂಗನಾಥ್, ನಿಗಮದ ಅಧ್ಯಕ್ಷ ಡಾ.ಸುಧೀರ್ ಕೃಷ್ಣ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎಂ.ಲಕ್ಷ್ಮೀನಾರಾಯಣ, ಕರ್ನಾಟಕ ಭವನದ ಸ್ಥಾನಿಕ ಆಯುಕ್ತೆ ವಂದನಾ ಗುರ್ನಾನಿ, ನಿಗಮದ ವ್ಯವಸ್ಥಾಪಕ ನಿರ್ದೇಶಕ ಎನ್.ಶಿವಶೈಲಂ ಮೊದಲಾದವರು ಇದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.