ಬೆಂಗಳೂರು: ಜೆಡಿಎಸ್ನ ಏಳು ಬಂಡಾಯ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿರುವ ದೂರಿನ ಕುರಿತಾದ ಆದೇಶವನ್ನು ಮೇ 7 ರೊಳಗೆ ಪ್ರಕಟಿಸುವಂತೆ ವಿಧಾನಸಭಾಧ್ಯಕ್ಷರಿಗೆ ನಿರ್ದೇಶಿಸಿರುವ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದ ತೀರ್ಪನ್ನು ಪ್ರಶ್ನಿಸಿದ್ದ ಮೇಲ್ಮನವಿಯ ವಿಚಾರಣೆ ಪೂರ್ಣಗೊಂಡಿದೆ.
ಏಕಸದಸ್ಯ ಪೀಠದ ತೀರ್ಪು ರದ್ದು ಪಡಿಸುವಂತೆ ಕೋರಿ ವಿಧಾನಸಭಾಧ್ಯಕ್ಷರ ಕಚೇರಿ ಕಾರ್ಯದರ್ಶಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಜೆಡಿಎಸ್ನ ಬಂಡಾಯ ಶಾಸಕರು ಸಲ್ಲಿಸಿರುವ ಈ ಮೇಲ್ಮನವಿ ವಿಚಾರಣೆಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ಹಾಗೂ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ರಜಾಕಾಲದ ವಿಭಾಗೀಯ ನ್ಯಾಯಪೀಠ ಶುಕ್ರವಾರ ಆಲಿಸಿದ್ದು ತೀರ್ಪು ಕಾಯ್ದಿರಿಸಿದೆ.
ವಿಚಾರಣೆ ವೇಳೆ ವಿಧಾನಸಭಾಧ್ಯಕ್ಷರು ಹಾಗೂ ವಿಧಾನಸಭಾಧ್ಯಕ್ಷರ ಕಚೇರಿ ಕಾರ್ಯದರ್ಶಿ ಪರ ಹಾಜರಿದ್ದ ಹಿರಿಯ ವಕೀಲ ಜಯಕುಮಾರ್ ಎಸ್.ಪಾಟೀಲ, ವಿಧಾನಸಭಾಧ್ಯಕ್ಷರು ನಿಲುವು ಏನೆಂಬುದನ್ನು ಜ್ಞಾಪನಾ ಪತ್ರ ಸಲ್ಲಿಸುವ ಮೂಲಕ ಕೋರ್ಟ್ಗೆ ತಿಳಿಯಪಡಿಸುವುದಾಗಿ ಹೇಳಿದರು.
ಬಂಡಾಯ ಶಾಸಕರ ಅನರ್ಹತೆ ಕೋರಿ ಮೂಡಿಗೆರೆ ಶಾಸಕ ಬಿ.ಬಿ.ನಿಂಗಯ್ಯ ಹಾಗೂ ಶ್ರವಣಬೆಳಗೊಳದ ಶಾಸಕ ಸಿ.ಎನ್.ಬಾಲಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಆರ್.ಎಸ್.ಚೌಹಾಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಮೇ 7ರೊಳಗೆ ಆದೇಶ ಪ್ರಕಟಿಸಿ’ ಎಂದು ವಿಧಾನಸಭಾಧ್ಯಕ್ಷರಿಗೆ ನಿರ್ದೇಶಿಸಿತ್ತು. ಇದನ್ನು ಪ್ರಶ್ನಿಸಿದ ಮೇಲ್ಮನವಿ ಇದಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.