ADVERTISEMENT

ಮೇಲ್ಸೇತುವೆ ರಸ್ತೆಗೆ ಸಿ.ಎಂ ಹಸಿರು ನಿಶಾನೆ

ಬ್ಯಾಟರಾಯನಪುರ– ವಿಮಾನ ನಿಲ್ದಾಣ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2014, 19:30 IST
Last Updated 3 ಮಾರ್ಚ್ 2014, 19:30 IST

ದೇವನಹಳ್ಳಿ: ‘ಬೆಂಗಳೂರು ಸೇರಿದಂತೆ ನಗರದ ಸುತ್ತಮುತ್ತಲ ರಸ್ತೆ ವ್ಯಾಪ್ತಿ­ಯಲ್ಲಿ ಸಂಚಾರ ವ್ಯವಸ್ಥೆ ಸುಗಮಗೊಳಿಸಲು ಮೇಲ್ಸೇತುವೆ ರಸ್ತೆ ನಿರ್ಮಾಣ ಮತ್ತು ರಸ್ತೆ ವಿಸ್ತರಣೆ ಅನಿವಾರ್ಯ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ದೇವನಹಳ್ಳಿ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 7ರ ಸಾದಹಳ್ಳಿ ಟೋಲ್ ಪ್ಲಾಜಾ ಬಳಿ ಅವರು ಮಾತನಾಡಿದರು.
‘22.12 ಕಿ.ಮೀ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ಮೇಲ್ಸೇತುವೆ ರಸ್ತೆ ಅಭಿವೃದ್ಧಿಗೆ ರೂ. 680 ಕೋಟಿ ವೆಚ್ಚವಾಗಿದೆ.  ರಸ್ತೆಯ ಎರಡು ಬದಿಯಲ್ಲಿ 41.82 ಕಿ.ಮೀ ಸರ್ವಿಸ್ ರಸ್ತೆ ಅಭಿವೃದ್ಧಿಯಾಗಿದೆ.

ವಿಮಾನ ನಿಲ್ದಾಣದಿಂದ ವಿಧಾನ ಸೌಧಕ್ಕೆ ಸುಗಮ ಸಂಚಾರಕ್ಕೆ ಅನುಕೂಲ ಮಾಡುವ ಉದ್ದೇಶದಿಂದ ಬಸವೇಶ್ವರ ವೃತ್ತದಿಂದ ಬ್ಯಾಟರಾಯನ­ಪುರದವರೆಗೂ ಷಟ್‌ಪಥ ರಸ್ತೆ ಅಭಿವೃದ್ಧಿಗೆ ರೂ. 1100 ಕೋಟಿ ಮೀಸಲಿಡಲಾಗಿದೆ. ರಸ್ತೆ ಅಭಿವೃದ್ಧಿಯಿಂದ ಗ್ರಾಮಗಳ ಪರಿಸ್ಥಿತಿಯೂ ಸುಧಾರಿಸು­ತ್ತದೆ. ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಕೊಡುಗೆ ಅಪಾರವಾಗಿದೆ’ ಎಂದು ತಿಳಿಸಿದರು.

ಕಾರ್ಯಕ್ರಮಕ್ಕೆ ಮೊದಲು ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ಆಸ್ಕರ್ ಫರ್ನಾಂಡಿಸ್, ‘ದೇಶದಲ್ಲಿ ಮೊದಲ ಬಾರಿಗೆ ಆಟೊರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ಆರ್.ಎಸ್.ಬಿ.ವೈ ರಾಷ್ಟ್ರೀಯ ಭೀಮಾ ಯೋಜನೆ ಮೂಲಕ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ. ಇಲ್ಲಿಯವರೆಗೆ 70 ಸಾವಿರ ಅರ್ಹ ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್‌ ವಿತರಿಸಲಾಗಿದೆ.

ಇದರಿಂದ ಒಂದು ಕುಟುಂಬದ ಗರಿಷ್ಠ ಐದು ಸದಸ್ಯರು ರೂ. 30 ಸಾವಿರದವರೆಗೆ ಉಚಿತ ಆರೋಗ್ಯ ಸೌಲಭ್ಯ ಪಡೆದುಕೊಳ್ಳಬಹುದು’ ಎಂದು ತಿಳಿಸಿದರು.

ಕೇಂದ್ರ ಇಂಧನ ಹಾಗೂ ಪೆಟ್ರೋಲಿಯಂ ಸಚಿವ ಡಾ.ಎಂ.ವೀರಪ್ಪ ಮೊಯಿಲಿ,  ಕೇಂದ್ರ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಸಚಿವ ಕೆ.ಎಚ್.ಮುನಿಯಪ್ಪ, ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಕೃಷ್ಣಭೈರೇಗೌಡ, ಲೋಕೋಪಯೋಗಿ ಸಚಿವ ಎಚ್.ಸಿ.ಮಹಾದೇವಪ್ಪ, ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ, ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಶಾಸಕ ವೆಂಕಟರಮಣಪ್ಪ, ವಿಶ್ವನಾಥ, ಜಗದೀಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT